ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ತಮಿಳುನಾಡಿಗೆ ನೀರು ಬಿಡುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಇಂದು ಬಿಜೆಪಿ ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲಿದೆ.
ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಹಳ್ಳಿ ಹಳ್ಳಿಯಲ್ಲೂ ಜಲ ಮೂಲ ಬತ್ತಿ ಹೋಗುತ್ತಿದೆ. ಇದನ್ನು ತಮಿಳುನಾಡು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರಾಜ್ಯ ಬೇರೆ ಬೇರೆ ಇರಬಹುದು ಆದರೆ ಜನರು ಜನರೇ ಅಲ್ಲವಾ ಎಂದು ಹೋರಾಟಗಾರರು ಪ್ರಶ್ನಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಕೆಆರ್ಎಸ್ ಜಲಾಶಯಕ್ಕೆ ಬಿಜೆಪಿ ಮುತ್ತಿಗೆ ಹಾಕಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಂಡ್ಯ-ಮೈಸೂರು ಭಾಗದ ಸಾವಿರಾರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜಲಾಶಯದತ್ತ ಬರಲಿದ್ದಾರೆ.
ಮಂಡ್ಯ ನಗರದಲ್ಲಿ ಈಗಾಗಲೇ ಉಗ್ರ ಪ್ರತಿಭಟನೆ ಆರಂಭವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.



