September 7, 2026
Monday, September 7, 2026
spot_img

ಲಂಚ ಸ್ವೀಕಾರ: ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ

ಹೊಸದಿಗಂತ ವರದಿ, ಮಡಿಕೇರಿ:

ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಾವೇರಿ ನೀರಾವರಿ ನಿಗಮದ ದ್ವಿತೀಯ ದರ್ಜೆ ಲೆಕ್ಕ ಸಹಾಯಕನೊಬ್ಬನನ್ನು ಬಂಧಿಸಿದ್ದಾರೆ.

ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರರ ಕಛೇರಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಆರ್.ಕೃಷ್ಣ ಎಂಬವರೇ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ.

ವಿದ್ಯುತ್ ಗುತ್ತಿಗೆದಾರ ಪ್ರಸನ್ನ ಎಂಬವರ ಒಂದೂವರೆ ಲಕ್ಷದ ಕಾಮಗಾರಿಯ ಬಿಲ್ ಮಾಡಲು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುಣಸೂರಿನ ಆರ್.ಕೃಷ್ಣ 35 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆಯಿಟ್ಟಿದ್ದರೆನ್ನಲಾಗಿದೆ.

ಈ ಪೈಕಿ ಗುರುವಾರ 20 ಸಾವಿರ ರೂ. ಹಣ ಪಡೆಯುತ್ತಿದ್ದ ಸಂದರ್ಭ, ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ, ಇನ್ಸ್’ಪೆಕ್ಟರ್’ಗಳಾದ ಲೋಕೇಶ್, ವೀಣಾ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕೃಷ್ಣನನ್ನು ವಶಕ್ಕೆ ಪಡೆದಿದೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್’ನ ಮುಖ್ಯ ಪೇದೆ ಲೋಕೇಶ್, ಸಿಬ್ಬಂದಿಗಳಾದ ಮಂಜುನಾಥ್, ಶಶಿ, ಲೋಹಿತ್, ಪ್ರವೀಣ್ ಕುಮಾರ್, ದೀಪಿಕಾ, ಅರುಣ್ ಕುಮಾರ್, ಸಲಾಹುದ್ದೀನ್ ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !