ಹೊಸದಿಗಂತ ವರದಿ ಕಾರವಾರ
ಕಾರವಾರ:ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಬರಪರಿಸ್ಥಿತಿಯ ಅಧ್ಯಯನಕ್ಕೆ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೂಚಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿಯನ್ನು ಸಚಿವ ಲಕ್ಷ್ಮಣ ಸವದಿಗೆ ವಹಿಸಲಾಗಿದೆ.
ರಾಜ್ಯದಲ್ಲಿ ಕೆಲವಡೆ ಅತಿವೃಷ್ಟಿಯಿಂದ ಸಮಸ್ಯೆಗಳಾಗಿದ್ದು ಕೆಲವಡೆ ತೀವ್ರ ಬರ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಪ್ರತಿಯೊಂದು ಜಿಲ್ಲೆಗಳ ಪ್ರತಿಯೊಂದು ತಾಲೂಕುಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯ ಪರಿವೀಕ್ಷಣೆ ನಡೆಸಿ ವಾಸ್ತವ ಸ್ಥಿತಿಯ ವರದಿಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಚಿವರುಗಳಿಗೆ ಸೂಚಿಸಿದ್ದು, ಉತ್ತರ ಕನ್ನಡ ಜಿಲ್ಲೆಗೆ ಅಥಣಿ ಶಾಸಕ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಲಕ್ಷ್ಮಣ ಸವದಿಗೆ ನೀಡಲಾಗಿದ್ದು ಶೀಘ್ರದಲ್ಲೇ ಅವರ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕಾರ್ಯಕ್ರಮ ನಿಗದಿಯಾಗಲಿದೆ.
ಇದನ್ನೂ ಓದಿ:
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ದೊರಕದಿರುವುದರಿಂದ ಜಿಲ್ಲೆಯ ಆಡಳಿತ ಹಾಗೂ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳ ಜವಾಬ್ದಾರಿಯನ್ನು ಸಚಿವ ಯು.ಟಿ.ಖಾದರ್ ಅವರಿಗೆ ನೀಡಲಾಗಿದ್ದು ಸಚಿವ ಸಂಪುಟ ವಿಸ್ತರಣೆಯಲ್ಲೂ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ಒಲಿದು ಬರದ ಕಾರಣ ಮತ್ತು ಉಸ್ತುವಾರಿಯ ಹೊಣೆ ಹೊತ್ತಿರುವ ಯು.ಟಿ.ಖಾದರ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪರಿಸ್ಥಿತಿಯ ಅಧ್ಯಯನ ಪ್ರವಾಸ ಮಾಡಬೇಕಾದ ಕಾರಣ ಉತ್ತರ ಕನ್ನಡ ಜಿಲ್ಲೆಯ ಪರಿಸ್ಥಿತಿಯ ಅಧ್ಯಯನದ ಜವಾಬ್ದಾರಿಯನ್ನು ಸಚಿವ ಲಕ್ಷ್ಮಣ ಸವದಿಗೆ ನೀಡಲಾಗಿದ್ದು ಅವರು ಜಿಲ್ಲೆಯ ಅತಿವೃಷ್ಟಿ ಮತ್ತು ಬರಪರಿಸ್ಥಿತಿಯ ಕುರಿತಂತೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ.



