August 12, 2026
Wednesday, August 12, 2026
spot_img

ಮುಂಬೈನಲ್ಲಿ ಭೀಕರ ಭೂಕುಸಿತ: ಕುರ್ಲಾದಲ್ಲಿ ಇಬ್ಬರು ದುರ್ಮ*ರಣ, ಅವಶೇಷಗಳಡಿ ಹಲವರು ಸಿಲುಕಿರುವ ಭೀತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬೈ ಮಹಾನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಘಾಟ್‌ಕೋಪರ್‌ನ ಚಿರಾಗ್ ನಗರದಲ್ಲಿರುವ ಗೌಸಿಯಾ ಚಾವ್ಲ್‌ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಇಂದು (ಬುಧವಾರ) ಮುಂಜಾನೆ ನಡೆದ ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಇನ್ನು 4 ರಿಂದ 5 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಭೀತಿ ಎದುರಾಗಿದೆ.

ಮುಂಜಾನೆ ನಡೆದ ದುರಂತ:

ಮುಂಬೈ ಮಹಾನಗರ ಪಾಲಿಕೆ (BMC) ನೀಡಿದ ಮಾಹಿತಿ ಪ್ರಕಾರ, ಬುಧವಾರ ಮುಂಜಾನೆ ಸುಮಾರು 3:48 ಕ್ಕೆ ಈ ಘಟನೆ ಸಂಭವಿಸಿದೆ. ಗುಡ್ಡದ ಒಂದು ಭಾಗವು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರಿಂದ ಪಕ್ಕದಲ್ಲಿದ್ದ 2 ರಿಂದ 3 ಮನೆಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ. ಆ ಸಮಯದಲ್ಲಿ ಮನೆಯಲ್ಲಿ ಮಲಗಿದ್ದ ಜನರು ಮಣ್ಣಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ:

ಘಟನೆ ನಡೆದ ಬೆನ್ನಲ್ಲೇ ಬಿಎಂಸಿ ಮೇಯರ್ ರಿತು ತಾವ್ಡೆ ಮತ್ತು ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ಅವಿನಾಶ್ ಧಾಕ್ನೆ ಅವರು ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಮುಂದುವರೆದ ರಕ್ಷಣಾ ಕಾರ್ಯಾಚರಣೆ:

ಸ್ಥಳದಲ್ಲಿ ಮುಂಬೈ ಅಗ್ನಿಶಾಮಕ ದಳ, ಮುಂಬೈ ಪೊಲೀಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಪತ್ತೆ ಹಚ್ಚಲು ಜೀವಂತ ವ್ಯಕ್ತಿಗಳನ್ನು ಗುರುತಿಸುವ ಸುಧಾರಿತ ‘ವಿಕ್ಟಿಮ್ ಕ್ಯಾಮೆರಾ’ಗಳನ್ನು ಬಳಸಲಾಗುತ್ತಿದೆ.

ಪೊಲೀಸ್ ಕಮಿಷನರ್ ಮಾಹಿತಿ:

ಘಟನೆ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಡಿಸಿಪಿ ಗಣೇಶ್ ಶಿಂದೆ, ರಕ್ಷಣಾ ಕಾರ್ಯಾಚರಣೆ ಚುರುಕಾಗಿ ನಡೆಯುತ್ತಿದೆ. ಸದ್ಯಕ್ಕೆ ನಿಖರ ಸಂಖ್ಯೆ ಹೇಳಲು ಸಾಧ್ಯವಿಲ್ಲದಿದ್ದರೂ ಇನ್ನೂ ಮೂರರಿಂದ ನಾಲ್ಕು ಜನರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಾಟ್‌ಕೋಪರ್ ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಇಬ್ಬರಿಗೆ ಗಂಭೀರ ಗಾಯ:

ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ತಲೆಗೆ ಪೆಟ್ಟಾಗಿರುವ ಸೊಹೈಲ್ ಅನ್ಸಾರಿ (18) ಮತ್ತು ಬೆನ್ನಿಗೆ ಪೆಟ್ಟಾಗಿರುವ ಮೊಹಮ್ಮದ್ ಅನ್ಸಾರಿ (14) ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !