ಹೊಸದಿಗಂತ ವರದಿ ಚಿತ್ರದುರ್ಗ:
ಸ್ವಾತಂತ್ರ್ಯ ಹೋರಾಟದಲ್ಲಿನ ಅನೇಕ ಮಹನೀಯರ ಅಪ್ರತಿಮ ತ್ಯಾಗ, ಬಲಿದಾನ, ಐತಿಹಾಸಿಕ ಕ್ಷಣಗಳ ನೆನಪಿಗಾಗಿ ಮತ್ತು ದೇಶಪ್ರೇಮದ ಜಾಗೃತಿಗಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.
ಬಿಜೆಪಿ ನಗರ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಹರ್-ಘರ್ ತಿರಂಗಾ ಅಭಿಯಾನಕ್ಕೆ ತಮ್ಮ ನಿವಾಸದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಭಾರತದ 80ನೇ ವರ್ಷಕ್ಕೆ ಹೆಜ್ಜೆ ಇಡುತ್ತಿರುವ ಸಂದರ್ಭದಲ್ಲಿ ಬ್ರಿಟೀಷರ ದಾಸ್ಯದ ವಿರುದ್ಧ ನಮ್ಮ ಹಿರಿಯರು ರಕ್ತಸಿಕ್ತ ಬಲಿದಾನದ ಹೋರಾಟ ನಡೆಸಿದರು. ಇಂದಿನ ಯುವ ಸಮೂಹ ಹಾಗೂ ಮುಂದಿನ ಪೀಳಿಗೆಗೆ ಇತಿಹಾಸ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ. ಕಳೆದ ಹತ್ತು ವರ್ಷಗಳ ಹಿಂದೆ ಭಾರತವನ್ನು ಕೇವಲ ಬಡ ರಾಷ್ಟ್ರ ಎಂದು ಜಗತ್ತಿನಾದ್ಯಂತ ಬಿಂಬಿಸಲಾಗುತ್ತಿತ್ತು. ಆದರೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಚಿತ್ರಣ ಸಂಪೂರ್ಣ ಬದಲಾಗಿದೆ. ಭಾರತದ ಜಾಗತಿಕ ಹಿರಿಮೆ ಗಗನಕ್ಕೇರಿದೆ ಎಂದರು.
ದೇಶಗಳಲ್ಲಿ ಯುದ್ಧ ನಡೆಯುವ ಸಂದರ್ಭದಲ್ಲಿ ಜಾಗತಿಕ ಮಟ್ಟದ ನಾಯಕರು ಶಾಂತಿ ಸ್ಥಾಪನೆಗಾಗಿ ಭಾರತದ ನೆರವು ಮತ್ತು ಮಧ್ಯಸ್ಥಿಕೆ ಕೋರುತ್ತಿದ್ದಾರೆ. ಪ್ರಸ್ತುತ ಭಾರತವು ಬಡತನದ ರೇಖೆ ದಾಟಿ ಆರ್ಥಿಕವಾಗಿ ಮುನ್ನಡೆಯುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಪ್ರತಿ ಮನೆಗೂ ಶೌಚಾಲಯ ನಿರ್ಮಿಸುವ ಮೂಲಕ ಸ್ವಚ್ಛಭಾರತ್ ಯೋಜನೆ ಜಾರಿಗೊಳಿಸಿದೆ. ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಪ್ರತಿ ಮನೆಗೂ ಕುಡಿಯುವ ನೀರು, ಉಚಿತ ಗ್ಯಾಸ್ ಸಂಪರ್ಕ ಮತ್ತು ಉಚಿತ ಪಡಿತರ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳನ್ನು ನೀಡಿದೆ ಎಂದು ಹೇಳಿದರು.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ 370ನೇ ವಿಧಿ ರದ್ದು, ತ್ರಿವಳಿ ತಲಾಖ್ ನಿಷೇಧ, ಸರ್ಜಿಕಲ್ ದಾಳಿ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ ಕೇಂದ್ರ ಸರ್ಕಾರದ ಐತಿಹಾಸಿಕ ಹಾಗೂ ದಿಟ್ಟನಿರ್ಧಾರಗಳು ಶ್ಲಾಘನೀಯ ಎಂದ ಅವರು, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದ ದಿನಗಳಲ್ಲಿ ಪ್ರತಿ ನಾಗರಿಕರು ತಮ್ಮ ಮನೆಗಳ ಮೇಲೆ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ:
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್ ಮಾತನಾಡಿ, ನಮ್ಮ ದೇಶದ ಗೌರವ, ಏಕತೆ ಮತ್ತು ರಾಷ್ಟ್ರಭಕ್ತಿಯ ಪ್ರತೀಕವಾದ ತ್ರಿವರ್ಣ ಧ್ವಜವನ್ನು ಪ್ರತಿಯೊಬ್ಬರೂ ತಮ್ಮ ಮನೆ, ಅಂಗಡಿ, ಕಚೇರಿ ಹಾಗೂ ಸಂಸ್ಥೆಗಳಲ್ಲಿ ಗೌರವದಿಂದ ಹಾರಿಸಿ ನಮ್ಮ ಹೆಮ್ಮೆಯ ಪ್ರಧಾನಿಗಳು ಕರೆ ಕೊಟ್ಟಂತೆ “ಹರ್ ಘರ್ ತಿರಂಗಾ” ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸೋಣ. ನಮ್ಮ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸೋಣ. ಪ್ರತಿ ಮನೆಗೂ ದೇಶಭಕ್ತಿಯ ಸಂದೇಶ ತಲುಪಿಸೋಣ. ಆಗಸ್ಟ್ 13 ರಿಂದ 15ರವರೆಗೆ ಪ್ರತಿಯೊಂದು ಮನೆಯಲ್ಲಿ ತಿರಂಗಾ ಹಾರಿಸುವ ಮೂಲಕ ರಾಷ್ಟ್ರಪ್ರೇಮ ವ್ಯಕ್ತಪಡಿಸೋಣ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು, ಗ್ರಾಮಾಂತರ ಅಧ್ಯಕ್ಷ ನಾಗರಾಜು, ಜಿಲ್ಲಾ ಕಾರ್ಯದರ್ಶಿ ರೇಖಾ, ಸಹ ವಕ್ತಾರ ನವೀನ್ ಚಾಲುಕ್ಯ, ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ್, ನಗರ ಕಾರ್ಯದರ್ಶಿ ಬಸವೇಶ್, ಸುಮಾ, ವೀಣಾ, ಕಾಂಚನ ಸೇರಿದಂತೆ ಇತರರು ಭಾಗವಹಿಸಿದ್ದರು.



