ಹೊಸದಿಗಂತ ವರದಿ ವಿಜಯನಗರ:
ಅನಿರೀಕ್ಷತ ಬೆಳವಣಿಗೆಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿಯಿಂದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಿಂದೆ ಸರಿದಿದ್ದಾರೆ. ವಿಜಯನಗರ ಮಾತ್ರವಲ್ಲ ರಾಜ್ಯದ ಯಾವುದೇ ಜಿಲ್ಲೆಯ ಉಸ್ತುವಾರಿ ಬೇಡವೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಪತ್ರದ ಮೂಲಕ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇದೆ. ಆದ್ದರಿಂದ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು, ಸ್ವಾತಂತ್ರೋತ್ಸವಕ್ಕೂ ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡುವಂತೆ ಕೋರಿದ್ದಾರೆ. ಸರ್ಕಾರದ ಸೂಚನೆಯಂತೆ ವಿಜಯನಗರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಹೊಣೆಗಾರಿಕೆಯನ್ನು ನಿಭಾಯಿಸಿದ್ದಾಗಿ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಆದರೆ, ದಿಢೀರ್ ಬೆಳವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿಯಿಂದ ಸಚಿವ ಜಮೀರ್ ಅಹಮ್ಮದ್ ಖಾನ್ ಹಿಂದೆ ಸರಿದಿರುವುದು ಕಾಂಗ್ರೆಸ್ ಪಕ್ಷ, ಮುಸ್ಲಿಂ ಸಮುದಾಯ ಹಾಗೂ ಜಿಲ್ಲಾ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ನಾನಾ ರೀತಿಯ ವಿಶ್ಲೇಷಣೆಗಳು ಶುರುವಾಗಿವೆ.



