ಹೊಸದಿಗಂತ ವರದಿ ದಾವಣಗೆರೆ:
ಹೆತ್ತ ತಾಯಿಯನ್ನು ಹತ್ಯೆ ಮಾಡಿದ ಮಗನಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಿ ದಾವಣಗೆರೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ತಾಲೂಕಿನ ನೇರ್ಲಿಗೆ ಗ್ರಾಮದ ಲೋಕನಾಯ್ಕ ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರತಿದಿನ ಮದ್ಯಪಾನ ಮಾಡಿಕೊಂಡು ಬಂದು ಆಸ್ತಿಗಾಗಿ ಗಲಾಟೆ ಮಾಡುತ್ತಿದ್ದ ಲೋಕನಾಯ್ಕ, ಕಳೆದ 2023 ಅಕ್ಟೋಬರ್ 10ರಂದು ರಾತ್ರಿ ಮಂಗಳೂರು ಕೆಂಪು ಹಂಚಿನಿಂದ ತಾಯಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದ. ಈ ಬಗ್ಗೆ ಸಹೋದರಿ ನೀಡಿದ ದೂರಿನ ಮೇರೆಗೆ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾದ ಸಿಪಿಐ ಡಿ.ನಾಗರಾಜ್ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ:
ವಿಚಾರಣೆ ನಂತರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಲೋಕನಾಯ್ಕಗೆ ಶಿಕ್ಷೆ, ದಂಡ ವಿಧಿಸಿ ನ್ಯಾಯಾಧೀಶ ಕ್ರಿಷ್ಣಮೂರ್ತಿ ಆರ್.ಪಡಸಲಗಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ 2,50,000 ರೂ.ಗಳನ್ನು ಪ್ರಕರಣದ ಸಂತ್ರಸ್ಥರಿಗೆ ನೀಡುವಂತೆಯೂ ಆದೇಶಿಸಿದ್ದಾರೆ. ಫಿರ್ಯಾದಿ ಪರವಾಗಿ ಸರ್ಕಾರಿ ವಕೀಲ ಜಯ್ಯಪ್ಪ ವಾದ ಮಂಡಿಸಿದ್ದರು.



