ಹೊಸದಿಗಂತ ವರದಿ ಬೆಳಗಾವಿ:
‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಘೋಷಣೆಗಳೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡಪರ ಸದಸ್ಯರು ಹಾಗೂ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆಯಿತು. ‘ಜೈ ಕರ್ನಾಟಕ’ ಘೋಷಣೆಗಳ ನಡುವೆ ಮೇಯರ್ ಹಾಗೂ ಉಪಮೇಯರ್ ಮೂಕಪ್ರೇಕ್ಷಕರಂತೆ ಉಳಿದ ಪ್ರಸಂಗವೂ ನಡೆಯಿತು.
ಕರ್ನಾಟಕ ಪರ ಗೊತ್ತುವಳಿಯನ್ನು ತಕ್ಷಣವೇ ಅಂಗೀಕರಿಸಬೇಕು ಎಂದು ಸದಸ್ಯರು ಒತ್ತಾಯಿಸಿದರೂ, ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು ಸರ್ಕಾರದ ನಿರ್ದೇಶನಕ್ಕಾಗಿ ಕಾಯುವ ನಿಲುವು ತಳೆದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಯಿತು.

ಸಭೆಯಲ್ಲಿ ಸದಸ್ಯರು ‘ಜೈ ಕರ್ನಾಟಕ’ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಮೇಯರ್ ಸಭೆಯನ್ನು ಮುಂದೂಡಿ ಹೊರನಡೆದರು.
ಕರ್ನಾಟಕದ ಪರ ಸ್ಪಷ್ಟ ನಿರ್ಣಯ ಕೈಗೊಳ್ಳುವಂತೆ ವಿವಿಧ ಕನ್ನಡಪರ ಸಂಘಟನೆಗಳು ಹಿಂದಿನಿಂದಲೂ ಒತ್ತಾಯಿಸುತ್ತಿದ್ದು, ಈ ವಿಚಾರದಲ್ಲಿ ಪಾಲಿಕೆಯ ನಿಲುವು ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.



