ಹೊಸದಿಗಂತ ವರದಿ ದಾವಣಗೆರೆ:
ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಮಂಗಳವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ನಗರದ ಎಂಸಿಸಿ ಬಿ-ಬ್ಲಾಕ್ ಹಾಗೂ ದಾವಣಗೆರೆ ತಾಲ್ಲೂಕಿನ ಅಣಬೇರು ಮತ್ತು ಹೊನ್ನಾಳಿ, ಹರಿಹರದಲ್ಲಿರುವ ಅಭ್ಯರ್ಥಿಗಳ ನಿವಾಸಗಳ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿತು. ನೇಮಕಾತಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸಿದರು ಎನ್ನಲಾಗಿದೆ.
ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಧಿಕಾರಿಗಳು ನೇಮಕಾತಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.



