ಹೊಸದಿಗಂತ ವರದಿ ದಾವಣಗೆರೆ:
ಗುಟ್ಕಾ ನಿಷೇಧಿಸುವ ಗೊಂದಲಕಾರಿ ನಿರ್ಧಾರದಿಂದಾಗಿ ಅಡಿಕೆ ಧಾರಣೆ ಕುಸಿದಿದ್ದು, ಬೆಳಗಾರರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಇಂತಹ ನಿರ್ಧಾರ ಖಂಡಿಸಿ ಆ.26ರಿಂದ ಜಿಲ್ಲೆಯಲ್ಲಿ ಪಾದಯಾತ್ರೆ, ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ನಿರ್ಧಾರದ ವಿರುದ್ಧ ಆ.26ರಂದು ಬೆಳಿಗ್ಗೆ 9 ಗಂಟೆಗೆ ಚನ್ನಗಿರಿ, ಮಾಯಕೊಂಡ, ಹೊನ್ನಾಳಿ, ಹರಿಹರ, ಜಗಳೂರು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಪಾದಯಾತ್ರೆ ಆರಂಭಗೊಂಡು, ಆ.27ರಂದು ವಿವಿಧೆಡೆ ವಾಸ್ತವ್ಯ ಮಾಡಿ, ಆ.28ರಂದು ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಜಿಲ್ಲೆಯ ಎಲ್ಲಾ ಅಡಿಕೆ ಬೆಳೆಗಾರರು, ರೈತರು, ರೈತ ಮಹಿಳೆಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:
ಸಿಗರೇಟ್, ಮದ್ಯದ ಲಾಬಿಗೆ ಮಣಿದು ರಾಜ್ಯ ಸರ್ಕಾರ ಅಡಿಕೆ ಬೆಳೆಗಾರರ ಹೊಟ್ಟೆ ಮೇಲೆ ಹೊಡೆಯುವ ಕೆಲಸಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವರು ತಮ್ಮ ಅಹಂಕಾರದ ಧೋರಣೆ ಕೈಬಿಟ್ಟು, ಅಡಿಕೆ ಬೆಳೆಗಾರರ ನೆರವಿಗೆ ಧಾವಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ. ಕಳಂಕಿತ ಸಚಿವ ಬಿ.ನಾಗೇಂದ್ರರನ್ನು ಸಂಪುಟದಿಂದ ವಜಾಗೊಳಿಸುವಂತೆಯೂ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ನಿರಂತರ ಹೋರಾಟ ಕೈಗೊಂಡಿದೆ ಎಂದರು.
ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಚಂದ್ರಶೇಖರ ಪೂಜಾರ, ಬಿ.ಎಸ್.ಜಗದೀಶ, ಜಿ.ಎಂ.ರುದ್ರಗೌಡ್ರು, ಬಿ.ಎಂ.ಸತೀಶ ಕೊಳೇನಹಳ್ಳಿ, ಧನಂಜಯ ಕಡ್ಲೇಬಾಳು, ಶಂಕರಗೌಡ ಬಿರಾದಾರ್, ರಾಜು ತೋಟದ್, ತಾರೇಶ ನಾಯ್ಕ, ಚೇತನಾ ಬಾಯಿ, ಹೆಚ್.ಸಿ.ಜಯಮ್ಮ, ವೀಣಾ ನಂಜಪ್ಪ, ಗೌರಮ್ಮ ಪಾಟೀಲ್, ರಾಕೇಶ ಭಜರಂಗಿ, ರಾಜು ವೀರಣ್ಣ, ಸಂತೋಷ ಪೈಲ್ವಾನ್, ಪ್ರವೀಣ ಜಾಧವ್, ಪಂಜು ಪೈಲ್ವಾನ್ ಸುದ್ದಿಗೋಷ್ಠಿಯಲ್ಲಿದ್ದರು.



