ಹೊಸದಿಗಂತ ವರದಿ ವಿಜಯಪುರ:
ವಿಜಯಪುರದಲ್ಲಿರುವ ಭೂತನಾಳ ಕೆರೆಯಲ್ಲಿ ಇಬ್ಬರು ಬಾಲಕರು ಸೇರಿದಂತೆ ಆರು ಮೃತದೇಹಗಳು ನೀರಿನಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ. ನಾಲ್ವರು ಮಹಿಳೆಯರು ಮತ್ತು ಇಬ್ಬರು ಬಾಲಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಗಸ್ಟ್ 24 ರಂದು ಮಿಸ್ಸಿಂಗ್ ಆದವರು ಶವವಾಗಿ ಪತ್ತೆಯಾಗಿದ್ದು, ನಗರ ಹೊರ ವಲಯ ತೊರವಿ ಗ್ರಾಮದ ನಿವಾಸಿಗಳಾದ ಶೋಭಾ ಜಾಲಗೇರಿ (45) ತಾಯಿ, ವಿದ್ಯಾ (16), ಸುವರ್ಣ (14), ಗೌಡೇಶ್ (ಮಗ) (10), ವಿಕಾಸ (5) ಸಾನಿಕಾ (7) ಇವರುಗಳ ಶವ ಪತ್ತೆಯಾಗಿದೆ.
ಅಂದು ಪತಿ ಮಲಕಾರಿ ಭೀಮರಾಯ ಜಾಲಗೇರಿ ಜೊತೆಗೆ ಹೆಂಡತಿ ಜಗಳ ಮಾಡಿಕೊಂಡು ಮನೆಯಿಂದ ಹೊರಗಡೆ ಬಂದಿದ್ದಳು. ಅಲ್ಲದೇ, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಹೇಳಿದ್ದಳು ಎಂದು ಪ್ರಾರ್ಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ:
ಪ್ರಕರಣದ ತೀವ್ರತೆಯನ್ನು ಪರಿಗಣಿಸಿ, ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೀತಾರಾಮ್ ಹಾಗೂ ಇತರ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತನಿಖೆ ಚುರುಕು
ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



