August 26, 2026
Wednesday, August 26, 2026
spot_img

ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಭೇಟಿ

ಹೊಸದಿಗಂತ ವರದಿ ಬಂಟ್ವಾಳ:

ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಅವರು ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ತುಳು ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಪ್ರಾಚೀನ ವಸ್ತು-ಪರಿಕರಗಳನ್ನು ವೀಕ್ಷಿಸಿದರು.

ಕೇಂದ್ರದಲ್ಲಿರುವ ಅಬ್ಬಕ್ಕ ಕಲಾ ಗ್ಯಾಲರಿ ಹಾಗೂ ಮ್ಯೂಸಿಯಂ ವೀಕ್ಷಿಸಿದ ಜಿಲ್ಲಾಧಿಕಾರಿಯವರಿಗೆ ಕೇಂದ್ರದ ಸ್ಥಾಪಕಾಧ್ಯಕ್ಷ ಡಾ. ತುಕಾರಾಮ್ ಪೂಜಾರಿ ಅವರು ಅಲ್ಲಿನ ಸಂಗ್ರಹಗಳು ಹಾಗೂ ಅವುಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಟಿ.ಕೆ. ಸ್ವರೂಪ್, ಕೋಟೆ-ಕೊತ್ತಲಗಳು, ಶಾಸನಗಳು ಹಾಗೂ ಪ್ರಾಚೀನ ವಸ್ತು-ಪರಿಕರಗಳು ನಮ್ಮ ಚರಿತ್ರೆ ಮತ್ತು ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಕುರುಹುಗಳು ಎಂದರು. ಆಯಾ ಪ್ರದೇಶಗಳ ದೈವ, ದೇವಸ್ಥಾನಗಳು, ಶಾಸನಗಳು ಸೇರಿದಂತೆ ಸ್ಥಳೀಯ ಸಾಂಸ್ಕೃತಿಕ ಕುರುಹುಗಳನ್ನು ಸಾಧ್ಯವಾದಷ್ಟು ಅವುಗಳ ಮೂಲ ಸ್ಥಳದಲ್ಲಿಯೇ ಸಂರಕ್ಷಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು. ತುಳು ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಕಾರ್ಯವನ್ನು ಶ್ಲಾಘಿಸಿದ ಅವರು, ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದರು. ಇಂತಹ ಸಂಸ್ಥೆಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ:

ಈ ಸಂದರ್ಭದಲ್ಲಿ ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್.ಆರ್. ರಶ್ಮಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ತುಳು ಅಧ್ಯಯನ ಕೇಂದ್ರದ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !