ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಶೈಕ್ಷಣಿಕ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಉನ್ನತ ಮಟ್ಟದ ‘ಸಂಪುಟ ಉಪಸಮಿತಿ’ಯನ್ನು ರಚಿಸಿದೆ.
ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸರ್ಕಾರವು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದ ಬೆನ್ನಲ್ಲೇ, ರಾಜ್ಯದ ಯುವಜನತೆಯ ಆಕಾಂಕ್ಷೆಗಳು ಮುಂದಿನ ದಿನಗಳಲ್ಲಿ ಕರ್ನಾಟಕದ ಭವಿಷ್ಯವನ್ನು ರೂಪಿಸಲಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದ್ದಾರೆ.
‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಡಿ.ಕೆ.ಶಿವಕುಮಾರ್ ಅವರು, “ಪ್ರತಿಯೊಬ್ಬ ಯುವಕ-ಯುವತಿಯೂ ತಮ್ಮದೇ ಆದ ಕನಸುಗಳನ್ನು ಹೊಂದಿರುತ್ತಾರೆ. ಆ ಕನಸುಗಳು ಕೇವಲ ಕನಸಾಗಿ ಉಳಿಯದೆ ನನಸಾಗಬೇಕು. ಅವರಿಗೆ ಅಗತ್ಯವಿರುವ ಗುಣಮಟ್ಟದ ಜ್ಞಾನ, ಆಧುನಿಕ ಕೌಶಲಗಳು ಹಾಗೂ ಸೂಕ್ತ ಉದ್ಯೋಗಾವಕಾಶಗಳನ್ನು ಶಿಕ್ಷಣದ ಮೂಲಕ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿಯಾಗಿದೆ.” ಎಂದು ಬರೆದುಕೊಂಡಿದ್ದಾರೆ.
ಉತ್ತಮ ಆಡಳಿತವು ಅಳಿಸುವುದರಿಂದ ಪ್ರಾರಂಭವಾಗುತ್ತದೆ ಎಂದು ನಂಬಿರುವ ಸಿಎಂ ಡಿಕೆಶಿ ಅವರು, “ಪರೀಕ್ಷೆ, ಶಿಕ್ಷಣದ ವೆಚ್ಚ, ಶಿಕ್ಷಣ ಸಂಸ್ಥೆಗಳ ಗುಣಮಟ್ಟ, ಉದ್ಯೋಗ ಮತ್ತು ಅವಕಾಶಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಮ್ಮ ಸರ್ಕಾರವು ಸೂಕ್ತ ಕ್ರಮಗಳೊಂದಿಗೆ ಬಗೆಹರಿಸಲು ಸ್ಪಂದಿಸಲಿದೆ” ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ಸಂಕಲ್ಪದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಹೊಸ ಭರವಸೆ ಮೂಡಿದ್ದು, ಪಾಠಕ್ಕಷ್ಟೇ ಸೀಮಿತವಾಗದೆ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಭದ್ರತೆಗೂ ಸರ್ಕಾರ ಆದ್ಯತೆ ನೀಡುತ್ತಿರುವುದು ಶೈಕ್ಷಣಿಕ ವರ್ಗದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು ಎಂಬ ಆಶಾವಾದ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.



