ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಬಿ. ನಾಗೇಂದ್ರ ದಿಢೀರನೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲು ನಿರ್ಧರಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಮಾಡುತ್ತಿರುವ ಸುಳ್ಳು ಆರೋಪಗಳು ಹಾಗೂ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಸಚಿವ ನಾಗೇಂದ್ರ ಅವರು ನೇರವಾಗಿ ಪಕ್ಷದ ವರಿಷ್ಠರಿಗೆ ಪರಿಸ್ಥಿತಿಯನ್ನು ವಿವರಿಸಲು ಮುಂದಾಗಿದ್ದಾರೆ. ತನಿಖಾ ಸಂಸ್ಥೆಗಳ ವರದಿಗಳು ಹಾಗೂ ತಮ್ಮ ರಾಜಕೀಯ ನಿಲುವಿನ ಕುರಿತು ಸ್ಪಷ್ಟ ಮಾಹಿತಿಯನ್ನು ನೀಡಿ, ಪ್ರತಿಪಕ್ಷಗಳ ಅಪಪ್ರಚಾರದಿಂದ ಪಕ್ಷ ಹಾಗೂ ಸರ್ಕಾರಕ್ಕೆ ಯಾವುದೇ ಹಾನಿಯಾಗದಂತೆ ತಡೆಯುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ.
ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ನಾಯಕರನ್ನು ನಾಗೇಂದ್ರ ಅವರು ಭೇಟಿಯಾಗಲಿದ್ದಾರೆ. ಪ್ರಸ್ತುತ ರಾಜಕೀಯ, ವಿಪಕ್ಷಗಳ ತಂತ್ರಗಾರಿಕೆ ಹಾಗೂ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವರಿಷ್ಠರ ಮುಂದಿಡಲಿದ್ದಾರೆ.
ರಾಜೀನಾಮೆ ಮತ್ತು ಪ್ರತಿಭಟನೆಗೆ ಕಾರಣವೇನು?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳುಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ತೀವ್ರ ಒತ್ತಾಯ ಹೇರಿ ಧರಣಿ ನಡೆಸುತ್ತಿವೆ. ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಮತ್ತು ಕಾನೂನಾತ್ಮಕವಾಗಿ ತಮ್ಮ ನಿರಪರಾಧಿತ್ವ ಸಾಬೀತುಪಡಿಸಲು ಸಚಿವ ನಾಗೇಂದ್ರ ರಾಜೀನಾಮೆ ನಿರ್ಧಾರ ಹಾಗೂ ಹೈಕಮಾಂಡ್ ಈ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ವರದಿಗಳು ಬಂದಿದ್ದವು.



