ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಬರ್ ಕ್ರೈಂ ಪ್ರಕರಣವನ್ನು ಬೇಧಿಸಲೆಂದು ಬೆಂಗಳೂರಿನಿಂದ ಮಧ್ಯಪ್ರದೇಶಕ್ಕೆ ತೆರಳಿದ್ದ ಪೊಲೀಸ್ ಇನ್ಸ್ಪೆಕ್ಟರ್ ರವಿ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇನ್ಸ್ಪೆಕ್ಟರ್ ರವಿ ಪ್ರಕರಣವನ್ನು ಬೇಧಿಸಲು ಭೋಪಾಲ್ನಿಂದ ಇಂದೋರ್ಗೆ ಬಸ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಸ್ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ರವಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆಯಲ್ಲಿ ಕಾರ್ಯನಿರ್ವಿಸುತ್ತಿದ್ದ ಇನ್ಸ್ಪೆಕ್ಟರ್ ಕರ್ತವ್ಯದ ಮೇಲೆ ಮಧ್ಯಪ್ರದೇಶಕ್ಕೆ ತೆರಳಿದ್ದರು. ಸೈಬರ್ ಎಪಿಕೆ ಫೈಲ್ ಫ್ರಾಡ್ಗೆ ಸಂಬಂಧಿಸಿದ ಮಾಹಿತಿ ಕಲೆಹಾಕಲು ಒಂಬತ್ತು ಜನರ ತಂಡ ಬೆಂಗಳೂರಿನಿಂದ ಮಧ್ಯಪ್ರದೇಶಕ್ಕೆ ಪ್ರಯಾಣ ಬೆಳೆಸಿತ್ತು.
ಯಾವ ಪ್ರಕರಣ ಬೇಧಿಸಲು ಹೋಗಿದ್ದರು?
ಎಪಿಕೆ ಫೈಲ್ ಫ್ರಾಡ್ಗೆ ಸಂಬಂಧಿಸಿದ ಪ್ರಕರಣದ ತನಿಖೆಗಾಗಿ ಒಂಬತ್ತು ಜನರ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು. ಅಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ನಂತರ ಆರು ಸಿಬ್ಬಂದಿ ವಾಪಾಸ್ ಬೆಂಗಳೂರಿಗೆ ಬಂದಿದ್ದರು. ಮೂವರು ಸಿಬ್ಬಂದಿ ಮಾತ್ರ ಅಲ್ಲೇ ಉಳಿದಿದ್ದು, ಇನ್ನಿತರ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದರು. ಆದರೆ ದುರದೃಷ್ಟವಶಾತ್ ಅವರು ಪ್ರಯಾಣಿಸುತ್ತಿದ್ದ ಬಸ್ ಪ್ರಪಾತಕ್ಕೆ ಬಿದ್ದಿತ್ತು. ಇನ್ನಿಬ್ಬರು ಸಿಬ್ಬಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
೨೦೦೫ ಬ್ಯಾಚ್ನ ನಿಷ್ಠ ಅಧಿಕಾರಿ
ಕೆ.ಬಿ ರವಿ ಅವರು ೨೦೦೫ ಬ್ಯಾಚ್ನಲ್ಲಿ ಕಾನ್ಸ್ಟೆಬಲ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಅದಾದ ನಂತರ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಅಶೋಕನಗರ, ಇಂದಿರಾನಗರ, ಕೋರಮಂಗಲದಲ್ಲಿಯೂ ಕಾರ್ಯ ನಿರ್ವಹಿಸಿದ್ದರು.



