ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ನಿಗಮದ ಹಗರಣದಲ್ಲಿ ಸುದ್ದಿಯಲ್ಲಿದ್ದ ಬಿ.ನಾಗೇಂದ್ರ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ ಮೊದಲ ವಿಕೆಟ್ ಪತನವಾಗಿದೆ.
ಭಾವುಕರಾಗಿ ಕಣ್ಣೀರಿಟ್ಟ ಬಿ.ನಾಗೇಂದ್ರ
ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮನ್ನು ನೈತಿಕವಾಗಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಜೊತೆಗೆ ಪ್ರತಿಪಕ್ಷ ಬಿಜೆಪಿ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ನಿಜವಾದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡದೆ ಬರೀ ರಾಜಕೀಯ ಮಾಡಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ:
ಇದು ಪುರಾಣದ ಕಾಲ ಅಲ್ಲ
ಸಂವಿಧಾನದ ಬದಲು ಮನುಸ್ಮೃತಿ ಆಧರಿಸಿ ರಾಜಕಾರಣ ಮಾಡೋಕೆ ಶುರುಮಾಡಿದ್ದಾರೆ. ಇದು ಹಳೆಯ ವೇದ ಪುರಾಣದ ಕಾಲ ಅಲ್ಲ, ಸಂವಿಧಾನದ ಕಾಲ ಸಂವಿಧಾನ ಎಲ್ಲರಿಗೂ ರಕ್ಷಣೆ ಕೊಡುತ್ತೆ ಎಂದು ಹೇಳಿದ ಅವರು, ದಲಿತರು ಹಾಗೂ ಆದಿವಾಸಿಗಳು ಸಚಿವರಾಗಬಾರದು ಎಂಬ ತಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.
ಏನಿದು ವಾಲ್ಮೀಕಿ ಹಗರಣ?
‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ’ದಲ್ಲಿ ಸುಮಾರು 187 ಕೋಟಿ ರೂ ಮೊತ್ತದ ಬೃಹತ್ ಹಣಕಾಸು ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎನ್ನಲಾಗಿತ್ತು. ಈ ಪ್ರಕರಣದ ಸಂಬಂಧ 2024ರಲ್ಲಿ ನಿಗಮದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆಗಿದ್ದ ಚಂದ್ರಶೇಖರನ್ ಪಿ. ಎಂಬ ಅಧಿಕಾರಿ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಯ ಸಂದರ್ಭದಲ್ಲಿ ಅವರು ಬರೆದಿಟ್ಟಿದ್ದ ಡೆತ್ ನೋಟ್ನಲ್ಲಿ ಈ ಹಣಕಾಸು ಅಕ್ರಮದ ಕುರಿತು ಮಾಹಿತಿ ನೀಡಿದ್ದರು. ಈ ಘಟನೆ ಇಡೀ ಪ್ರಕರಣವನ್ನು ಮುನ್ನೆಲೆಗೆ ತಂದಿತು.



