ಹೊಸದಿಗಂತ ವರದಿ ಶಿರಸಿ:
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಕಂದಾಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ, 473 ಚೀಲ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಗರದ ನಿಲೇಕಣಿ ಬಳಿ ನಡೆದಿದೆ.
ಸಿದ್ದಾಪುರ ಕಡೆಯಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ ಪಟ್ಟರಾಜ ಗೌಡ ಹಾಗೂ ಶಿರಸಿ ನಗರ ಠಾಣೆ ಪಿಎಸ್ಐ ನರಸಿಂಹಲು ನೇತೃತ್ವದಲ್ಲಿ ಅಧಿಕಾರಿಗಳು ನಿಲೇಕಣಿ ಬಳಿ ದಾಳಿ ನಡೆಸಿದರು.
ಈ ವೇಳೆ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ 473 ಚೀಲ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನೂ ಜಪ್ತಿ ಮಾಡಲಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಪಡಿತರ ಅಕ್ಕಿಯನ್ನು ಎಲ್ಲಿಂದ ಸಂಗ್ರಹಿಸಿ, ಎಲ್ಲಿಗೆ ಸಾಗಿಸಲಾಗುತ್ತಿತ್ತು ಹಾಗೂ ಅಕ್ರಮ ಸಾಗಾಟದ ಹಿಂದೆ ಯಾರ ಕೈವಾಡವಿದೆ ಎಂಬ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.



