ಹೊಸದಿಗಂತ ವರದಿ ಬೆಳಗಾವಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಕರೆ ನೀಡಿದರು.
ನಗರದ ಧರ್ಮನಾಥ ಭವನದ ಸಮೀಪದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನಸೇವೆ ಮತ್ತು ಸುಶಾಸನದ ಮೂಲಕ ಸಾರ್ಥಕ ಹಾಗೂ ಪರಿವರ್ತನಾತ್ಮಕ 25 ವರ್ಷಗಳ ಸುದೀರ್ಘ, ನಿಷ್ಕಳಂಕ ಮತ್ತು ಸಮರ್ಪಿತ ಕಾಯಕವನ್ನು ಪೂರ್ಣಗೊಳಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಪಕ್ಷದ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಮಂಡಲ ಅಧ್ಯಕ್ಷರುಗಳಿಗೆ ಸೂಚನೆ ನೀಡಿದ ಅವರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ‘ಸೇವಾ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:
ಸಭೆಯಲ್ಲಿ ಮಾಜಿ ಶಾಸಕ ಮಹಾಂತೇಶ ದೊಡಗೌಡರ, ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ಸಂದೀಪ ದೇಶಪಾಂಡೆ, ಸಂತೋಷ ಹಡಪದ, ಮಹಾಂತೇಶ ಚಿನ್ನಪ್ಪಗೌಡರ, ಯಲ್ಲೇಶ ಕೋಲಕಾರ, ಜಗದೀಶ್ ಬೂದಿಹಾಳ, ಮಹೇಶ ಮೋಹಿತೆ, ಮುರುಘೇಂದ್ರಗೌಡ ಪಾಟೀಲ, ಪ್ರಮೋದ ನುಗ್ಗಾನಟ್ಟಿ ಸೇರಿದಂತೆ ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.



