ಹೊಸದಿಗಂತ ವರದಿ ಹಾಸನ :
ಕೆಎಸ್ಆರ್ಟಿಸಿ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
ಅಪಘಾತದಲ್ಲಿ ದಿನೇಶ್ (38) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಗಾಯಗೊಂಡಿದ್ದು, ಅವರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಐಸಿಐ ಬ್ಯಾಂಕ್ಗೆ ಸೇರಿದ KA-50-B-7283 ನೋಂದಣಿ ಸಂಖ್ಯೆಯ ಬೊಲೆರೋ ಪಿಕಪ್ ಎಟಿಎಂಗಳಿಗೆ ಹಣ ತುಂಬಲು ತೆರಳುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಮಂಗಳೂರಿನಿಂದ ಬೆಂಗಳೂರಿನತ್ತ KA-19-F-3447 ನೋಂದಣಿ ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗಾಯಾಳುಗಳು ಕೊಡಗು ಹಾಗೂ ಮಂಗಳೂರು ಮೂಲದವರು ಎಂದು ತಿಳಿದುಬಂದಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



