ಹೊಸದಿಗಂತ ವರದಿ ವಿಜಯನಗರ:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ `ಪ್ರಜಾಸೇವೆ’ ಅಭಿಯಾನಕ್ಕೆ ಜಿಲ್ಲೆಯ ಕೂಡ್ಲಿಗಿಯಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಇಂದು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಸಣ್ಣ ಪುಟ್ಟ ಕೆಲಸಗಳು ಮತ್ತು ದೂರುಗಳಿಗಾಗಿ ಸಾರ್ವಜನಿಕರು ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸದಾಗಿ ರೂಪಿಸಿರುವ ಪ್ರಜಾಸೇವಾ ಇಲಾಖೆಯು `ಪ್ರಜಾಸೇವೆ ಅಭಿಯಾನ’ಕ್ಕೆ ದೀಪ ಬೆಳಗುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ, ಸಂಸದರಾದ ಈ.ತುಕಾರಾಂ, ಡಾ.ಪ್ರಭಾ ಮಲ್ಲಿಕಾರ್ಜುನ, ಜಿ.ಸಿ.ಚಂದ್ರಶೇಖರ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಎಚ್.ಆರ್.ಗವಿಯಪ್ಪ, ನೇಮಿರಾಜ್ ನಾಯ್ಕ, ಕೃಷ್ಣಾ ನಾಯ್ಕ, ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ.ಪರಮೇಶ್ವರ್ ನಾಯ್ಕ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗೋಯಲ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್ಪಿ ಜಾಹ್ನವಿ, ಜಿ.ಪಂ.ಸಿಇಓ ನೋಂಗ್ಜಾಯಿ ಮೊಹಮ್ಮದ್ ಅಲಿ ಅಕ್ರಂ ಶಾ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಬೇರು ಮಟ್ಟದಿಂದ ಆಡಳಿತವನ್ನು ಚುರುಕುಗೊಳಿಸುವ ಜತೆಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹೆಚ್ಚಿಸುವುದು ಹಾಗೂ ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.
ಇದನ್ನೂ ಓದಿ:
ಪ್ರತೀ ತಿಂಗಳ 1 ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ 2 ಮತ್ತು 4ನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಭೆಗಳು ನಡೆಯಲಿವೆ. ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅರ್ಜಿ ಪಡೆದು, ಸಾಧ್ಯವಾದಲ್ಲಿ ಸ್ಥಳದಲ್ಲೇ ಪರಿಹರಿಸುವುದು, ಆಡಳಿತದಲ್ಲಿ ಪಾರದರ್ಶಕತೆ ತರುವುದು ‘ಪ್ರಜಾಸೇವೆ ಅಭಿಯಾನ’ ಮುಖ್ಯ ಉದ್ದೇಶವಾಗಿದೆ.



