ಹೊಸದಿಗಂತ ವರದಿ ಕೊಪ್ಪಳ:
ತುಂಗಭದ್ರ ಜಲಾಶಯದಲ್ಲಿ ತುಂಬಿರುವ ಭಾರೀ ಪ್ರಮಾಣದ ಹೂಳನ್ನು ವೈಜ್ಞಾನಿಕವಾಗಿ ತೆರವುಗೊಳಿಸಲು ಸಾಧ್ಯವಿದೆಯೇ ಎಂಬುದನ್ನು ಸರ್ಕಾರ ತಕ್ಷಣ ತಜ್ಞರಿಂದ ಪರಿಶೀಲಿಸಬೇಕು. ಹೂಳು ತೆರವು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದಾದರೆ, ಯಾವುದೇ ವಿಳಂಬ ಮಾಡದೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬಜೆಟ್ನಲ್ಲಿ ಅನುದಾನ ಮೀಸಲಿಟ್ಟು ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ಶನಿವಾರ ಪಾದಯಾತ್ರೆಯ ವೇಳೆ ನವಿಲೆ ಸಮಾನಾಂತರ ಜಲಾಶಯ ಹೋರಾಟಗಾರರ ಜೊತೆ ನಡೆದ ಸಂವಾದದಲ್ಲಿ ಮಾತನಾಡಿದರು.
ತುಂಗಭದ್ರ ಜಲಾಶಯ ಅಚ್ಚುಕಟ್ಟು ಪ್ರದೇಶದ ಲಕ್ಷಾಂತರ ರೈತರ ಜೀವನಾಡಿಯಾಗಿದ್ದು, ಜಲಾಶಯದ ಸಂಗ್ರಹ ಸಾಮರ್ಥ್ಯ ಹೂಳಿನಿಂದ ಕುಸಿಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದರು.



