ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ಮಳೆ ಸ್ವಲ್ಪ ಸೈಲೆಂಟ್ ಆಗಿದೆ, ಅಂದ್ರೆ ನೈಋತ್ಯ ಮುಂಗಾರು ದುರ್ಬಲಗೊಂಡಿದೆ. ಆದರೆ ಮಳೆರಾಯ ಸಂಪೂರ್ಣವಾಗಿ ಕಾಲು ಕಸರಿಕೊಂಡು ಕುಳಿತಿಲ್ಲ. ಎಲ್ಲೋ ಒಂದಷ್ಟು ಕಡೆ ತಂಪಾದ ಮಳೆ ಹನಿಗಳನ್ನು ಸುರಿಸುತ್ತಾ ತನ್ನ ಅಸ್ತಿತ್ವ ತೋರಿಸುತ್ತಿದ್ದಾನೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದ ಗಾಳಿಯ ಜೊತೆಗೆ ಹಗುರದಿಂದ ಸಾಧಾರಣ ಮಳೆ ಬಂದು ವಾತಾವರಣ ಕೂಲ್ ಆಗುವ ಚಾನ್ಸಸ್ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಜೋರು ಗಾಳಿ ಬೀಸಲಿದೆ. ಇನ್ನು ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಗಿಂತ ಹೆಚ್ಚಾಗಿ ಇದೇ ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನು ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಅಂತಹ ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಜೊತೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.



