ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳ್ಳಂಬೆಳಗ್ಗೆಯೇ ದಿಢೀರ್ ಭೇಟಿ ನೀಡಿದ್ದಾರೆ. ಮಾರುಕಟ್ಟೆಯ ಇಂಚಿಂಚೂ ಪರಿಶೀಲನೆ ನಡೆಸಿದ ಅವರು, ಅಲ್ಲಿನ ವರ್ತಕರು ಹಾಗೂ ರೈತರೊಂದಿಗೆ ನೇರವಾಗಿ ಚರ್ಚಿಸಿ ಅವರ ಅಳಲನ್ನು ಕೇಳಿದ್ದಾರೆ.
ತೂಕದಲ್ಲಿ ಮೋಸ ನಡೆಯುತ್ತಿದೆಯೇ?
ಮಾರುಕಟ್ಟೆಯಲ್ಲಿ ರೈತರಿಗೆ ಮೋಸವಾಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ತಾವೇ ಖುದ್ದಾಗಿ ಭೇಟಿ ನೀಡಿ ಮಾಹಿತಿ ಕಲೆಹಾಕಿದರು. ರೈತರ ಬಳಿ ಮಾತನಾಡುತ್ತಾ, ಮಾರುಕಟ್ಟೆಗಳಲ್ಲಿ ನಿಮಗೇನಾದರೂ ತೂಕದಲ್ಲಿ ಮೋಸ ನಡೆಯುತ್ತಿದೆಯೇ? ಎಂದು ನೇರವಾಗಿ ಪ್ರಶ್ನಿಸಿದರು. ಇದಕ್ಕೆ ರೈತರು ತಮ್ಮ ದಿನನಿತ್ಯದ ಅನುಭವ ಹಾಗೂ ಎದುರಿಸುತ್ತಿರುವ ತೊಂದರೆಗಳನ್ನು ಸಿಎಂ ಮುಂದೆ ಬಿಚ್ಚಿಟ್ಟರು.
ನಮ್ಮ ಕಷ್ಟ ಕೇಳಲು ಕೃಷಿ ಸಚಿವರೇ ಬರುತ್ತಿಲ್ಲ
ಇದೇ ವೇಳೆ ರೈತರು ಹಾಗೂ ವರ್ತಕರು ಕೃಷಿ ಸಚಿವರ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದರು. ಕೃಷಿ ಸಚಿವರು ಒಮ್ಮೆಯೂ ಮಾರುಕಟ್ಟೆಗೆ ಬಂದು ತಮ್ಮ ಸಮಸ್ಯೆಗಳನ್ನು ಕೇಳಲಿಲ್ಲ ಎಂದು ಮುಖ್ಯಮಂತ್ರಿಗಳ ಮುಂದೆ ಬೇಸರ ವ್ಯಕ್ತಪಡಿಸಿದರು. ಮಾರುಕಟ್ಟೆಯಲ್ಲಿ ಸರಿಯಾದ ರಸ್ತೆ, ಕುಡಿಯುವ ನೀರು ಹಾಗೂ ಸ್ವಚ್ಛತೆಯಂತಹ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ಪರದಾಡಬೇಕಾಗಿದೆ ಎಂದು ದೂರಿದರು.
ಇದನ್ನೂ ಓದಿ:
ರೈತರಿಗೆ ಸಿಎಂ ಭರವಸೆ
ರೈತರು ಮತ್ತು ವರ್ತಕರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಕೇಳಿದ ಮುಖ್ಯಮಂತ್ರಿಗಳು, ಮಾರುಕಟ್ಟೆಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತೂಕದಲ್ಲಿ ಮೋಸ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಹಾಗೂ ರೈತರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಡಿಕೆಶಿ ಭರವಸೆ ನೀಡಿದ್ದಾರೆ.



