ಹೊಸದಿಗಂತ ವರದಿ ಬೆಳಗಾವಿ:
ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, 17 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಗರದ ಗೋಮಟೇಶ ವಿದ್ಯಾಪೀಠ ಕಾಲೇಜಿನಲ್ಲಿ ನಡೆದಿದೆ.
ಡಿಪ್ಲೊಮಾ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಿದ್ಯಾರ್ಥಿಯೊಬ್ಬ ಮತ್ತೋರ್ವ ವಿದ್ಯಾರ್ಥಿಯ ಭುಜಕ್ಕೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:
ಚಾಕು ಇರಿತದಿಂದ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ವಿದ್ಯಾರ್ಥಿಯೊಬ್ಬ ಕಾಲೇಜಿಗೆ ಚಾಕು ಇಟ್ಟುಕೊಂಡು ಬಂದಿದ್ದೇಕೆ? ಘಟನೆಗೆ ಪೂರ್ವದಲ್ಲಿ ಯಾವುದೇ ವೈಷಮ್ಯ ಇತ್ತೇ? ಎಂಬುದೂ ಸೇರಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಕಲೆಹಾಕಲಾಗುತ್ತಿದೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



