ಹೊಸದಿಗಂತ ವರದಿ ಹಾಸನ:
ನಗರದ ಚನ್ನಪಟ್ಟಣ ಬಡಾವಣೆಯಲ್ಲಿ ಪೆಟ್ರೋಲ್ ಬಂಕ್ ಉದ್ಯೋಗಿ ಮಣಿಕಂಠ (35) ಅವರನ್ನು ಕಲ್ಲಿನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಹತ್ಯೆ ನಡೆದ ಸಂದರ್ಭದ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ಪೊಲೀಸರ ತನಿಖೆಗೆ ಪ್ರಮುಖ ಸುಳಿವಾಗಿದೆ.
ಚನ್ನಪಟ್ಟಣ ಬಡಾವಣೆಯಲ್ಲಿ ಮಣಿಕಂಠ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆ ನಡೆಯುತ್ತಿದ್ದ ವೇಳೆ ಸಮೀಪದಲ್ಲಿದ್ದ ಮತ್ತೊಂದು ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ಕೃತ್ಯದ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ ಎನ್ನಲಾಗಿದೆ. ಈ ದೃಶ್ಯಗಳು ಪೊಲೀಸರ ಕೈಗೆ ಸಿಕ್ಕಿದ್ದು, ಆರೋಪಿಗಳ ಪತ್ತೆಗೆ ತನಿಖಾಧಿಕಾರಿಗಳು ವಿಡಿಯೋವನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ:
ಮೊಬೈಲ್ನಲ್ಲಿ ಸೆರೆಯಾಗಿರುವ ದೃಶ್ಯಗಳ ಆಧಾರದಲ್ಲಿ ಹಂತಕರ ಗುರುತು, ಅವರ ಚಲನವಲನ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನದ ಕುರಿತು ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ. ವಿಡಿಯೋದಲ್ಲಿನ ಪ್ರತಿಯೊಂದು ಸುಳಿವನ್ನೂ ಪರಿಶೀಲಿಸಲಾಗುತ್ತಿದೆ.
ಇದರ ಜೊತೆಗೆ, ಹತ್ಯೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿಗಳು ಕೃತ್ಯಕ್ಕೂ ಮುನ್ನ ಎಲ್ಲಿಂದ ಬಂದಿದ್ದರು, ಹತ್ಯೆಯ ಬಳಿಕ ಯಾವ ಮಾರ್ಗದಲ್ಲಿ ಪರಾರಿಯಾಗಿದ್ದಾರೆ ಎಂಬುದರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಮೊಬೈಲ್ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.



