ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಗಾಲವೋ ಅಥವಾ ಬೇಸಿಗೆಯೋ ಎನ್ನುವ ಗೊಂದಲವಿದೆ. ಬೆಳಗ್ಗೆ ಮೋಡ ಕವಿದ ವಾತಾವರಣ ನೋಡಿ ಇಂದಾದರೂ ಮಳೆ ಬೀಳಬಹುದು ಎಂದುಕೊಳ್ಳುತ್ತಿದ್ದರೆ ಅರ್ಧ ಗಂಟೆಯಲ್ಲೇ ಬೇಸಿಗೆಯ ಅನುಭವ ಆಗುತ್ತದೆ. ರಾಜ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಿಸಿಲಿನ ನಡುವೆ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದರೆ, ಕೆಲವು ಕಡೆ ಬರೀ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆ ಬೀಳುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಕರ್ನಾಟಕದಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.



