ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳಲ್ಲಿ ಹೆಚ್ಚುತ್ತಿರುವ ಅನಾರೋಗ್ಯಕರ ಪ್ಯಾಕೆಟ್ ಆಹಾರ ಸೇವನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಹೆಚ್ಚಿನ ಪ್ರಮಾಣದ ಸಕ್ಕರೆ, ಉಪ್ಪು ಹಾಗೂ ಕೊಬ್ಬು ಹೊಂದಿರುವ ಆಹಾರ ಉತ್ಪನ್ನಗಳ ಮೇಲೆ ಪ್ಯಾಕೆಟ್ನ ಮುಂಭಾಗದಲ್ಲೇ ಸ್ಪಷ್ಟ ಎಚ್ಚರಿಕೆ ನೀಡುವ ವ್ಯವಸ್ಥೆ ಕುರಿತು ಪರಿಶೀಲಿಸುವಂತೆ ಸಂಬಂಧಿತ ಸಂಸ್ಥೆಗಳಿಗೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಕೆ. ವಿನೋದ್ ಚಂದ್ರನ್ ಅವರ ಪೀಠವು ಗುರುವಾರ ವಿಚಾರಣೆ ನಡೆಸಿ, ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ನ್ಯಾಯಾಲಯ ಕಾಳಜಿ ಹೊಂದಿದೆ ಎಂದು ಹೇಳಿದೆ. ಈ ವಿಚಾರವನ್ನು ‘ರಾಷ್ಟ್ರೀಯ ಹಿತಾಸಕ್ತಿ’ಯ ದೃಷ್ಟಿಯಿಂದ ಪರಿಗಣಿಸುವಂತೆ ಪೀಠ ತಿಳಿಸಿದೆ.
ಇದನ್ನೂ ಓದಿ:
ಪ್ಯಾಕೆಟ್ ಆಹಾರಗಳ ಮೇಲೆ ಕಡ್ಡಾಯ ಎಚ್ಚರಿಕೆ ಲೇಬಲ್ ಅಳವಡಿಸುವಂತೆ ಕೋರಿ 3S and Our Health Society ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ.
ಆಹಾರ ಉತ್ಪನ್ನದಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಸಕ್ಕರೆ, ಉಪ್ಪು ಅಥವಾ ಕೊಬ್ಬು ಇದ್ದರೆ ಮುಂಭಾಗದಲ್ಲಿ ಎಚ್ಚರಿಕೆ ನೀಡುವ ನಿಯಮ ಸದ್ಯ ಜಾರಿಯಲ್ಲಿದೆಯೇ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ಯನ್ನೂ ನ್ಯಾಯಾಲಯ ಪ್ರಶ್ನಿಸಿದೆ.
ಸೆಪ್ಟೆಂಬರ್ 28ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದ್ದು, ಈ ಕುರಿತು ವಿವರವಾದ ಆದೇಶ ಹೊರಡಿಸುವುದಾಗಿ ನ್ಯಾಯಾಲಯ ತಿಳಿಸಿದೆ.



