ಮಮಹೊಸದಿಗಂತ ವರದಿ ಮಡಿಕೇರಿ:
ಕಸ್ತೂರಿರಂಗನ್ ವರದಿಯಲ್ಲಿ ಅಡಕವಾಗಿರುವ ರೈತರ ಹಿತಕ್ಕೆ ಮಾರಕವಾಗಿರುವ ಅಂಶಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಶುಕ್ರವಾರ ಮಡಿಕೇರಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಯಿತು.
ರೈತ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಗೆ ಪಕ್ಷಾತೀತವಾದ ಬೆಂಬಲ ವ್ಯಕ್ತವಾಯಿತು.
ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರಿಗೆ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ಮೂಲೆಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ರೈತರು, ಕೃಷಿಕರು, ಬೆಳೆಗಾರರು ಪಾಲ್ಗೊಂಡಿದ್ದರು.

ಗಾಂಧಿ ಮೈದಾನಕ್ಕೆ ಸಾಗುವ ಮಾರ್ಗ ಮಧ್ಯೆ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನಾಕಾರರು ಏಕಾಏಕಿ ವಾಹನ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬರುವಂತೆ ರೈತರು ಪಟ್ಟು ಹಿಡಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ರಸ್ತೆ ತಡೆ ಬಗ್ಗೆ ತಿಳಿಯದೆ ಪೊಲೀಸರೂ ಗೊಂದಲಕ್ಕೆ ಒಳಗಾದರು.
ಬಳಿಕ ಗಾಂಧಿ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಕಸ್ತೂರಿರಂಗನ್ ವರದಿಯಲ್ಲಿರುವ, ರೈತರಿಗೆ ಮಾರಕವಾಗಿರುವ ಅಂಶಗಳನ್ನು ಕೈಬಿಡಬೇಕೆಂದು ಒತ್ತಾಯಿಸಲಾಯಿತಲ್ಲದೆ, ಸಿ ಎಂಡ್ ಡಿ ಲ್ಯಾಂಡ್’ ಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ರೈತರ ಪ್ರತಿಭಟನೆಯ ಹಿನ್ನಲೆಯಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತು.



