ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ತೆನ್ಕಾಸಿ ಜಿಲ್ಲೆಯಲ್ಲಿ ಇಂದು (ಭಾನುವಾರ) ಭೀಕರ ಅಪಘಾತವೊಂದು ಸಂಭವಿಸಿದೆ. ಪ್ರಯಾಣಿಕರಿಂದ ತುಂಬಿದ್ದ ತಮಿಳುನಾಡು ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಸುಮಾರು 30 ಅಡಿ ಆಳದ ‘ಅಳುತಾ ಕನ್ನಿ’ ನದಿಗೆ ಉರುಳಿ ಬಿದ್ದಿದೆ. ಈ ಘಟನೆಯಿಂದಾಗಿ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ನೀರೊಳಗೆ ಸಿಲುಕಿಕೊಂಡಿರುವ ಭೀತಿ ಎದುರಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆನ್ಕಾಸಿ-ತಿರುನೆಲ್ವೇಲಿ ಮಾರ್ಗದಲ್ಲಿ ಚಲಿಸುತ್ತಿದ್ದ ಈ ಬಸ್ಸಿನಲ್ಲಿ ಒಟ್ಟು 32 ಪ್ರಯಾಣಿಕರಿದ್ದರು ಎನ್ನಲಾಗಿದೆ. ವೆಟ್ಟೈಕಾರನಕುಲಂ ಬಳಿ ತಲುಪುತ್ತಿದ್ದಂತೆ ಬಸ್ ತಲೆಕೆಳಗಾಗಿ ನೇರವಾಗಿ ನದಿಗೆ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಾಯದಿಂದ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ಈ ಅಪಘಾತದಲ್ಲಿ ಸದ್ಯ 17 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತೆನ್ಕಾಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಬಸ್ ಚಾಲಕ ಶಿವಶಕ್ತಿ (49) ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುನೆಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ರಕ್ಷಣಾ ಕಾರ್ಯ ಮುಂದುವರಿದಿದೆ.



