ಹೊಸದಿಗಂತ ಡಿಜಿಟಲ್ ಡೆಸ್ಕ್:
‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಕರ್ನಾಟಕ ಸರಕಾರ ಇತ್ತೀಚಿಗೆ ಆದೇಶ ಹೊರಡಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಆದೇಶ ಹೈಕೋರ್ಟ್ ಮೆಟ್ಟಿಲೇರಿದೆ.
ಸೆಪ್ಟೆಂಬರ್ 8ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಪರ ವಕೀಲ ಅಂಗದ್ ಕಾಮತ್ ಮೂಲಕ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ಸೆಪ್ಟೆಂಬರ್ 15ರಂದು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಅರ್ಜಿದಾರರ ವಾದ ಏನು?
ಈ ಆದೇಶವು ಕೇಂದ್ರ ಸರ್ಕಾರದ ಪ್ರೋಟೋಕಾಲ್ಗೆ ವಿರುದ್ಧವಾಗಿದೆ. ರಾಷ್ಟ್ರೀಯ ಗೀತೆಗೆ ಸಂಬಂಧಿಸಿದ ವಿಷಯ ರಾಜ್ಯ ಅಥವಾ ಸಮ Concurrent ಪಟ್ಟಿಯಲ್ಲಿ ಇಲ್ಲದ ಕಾರಣ, ಸಂವಿಧಾನದ 248ನೇ ವಿಧಿ ಹಾಗೂ ಯೂನಿಯನ್ ಲಿಸ್ಟ್ನ ಎಂಟ್ರಿ 97ರ ಅಡಿಯಲ್ಲಿ ಇದು ಸಂಸತ್ತಿನ ವ್ಯಾಪ್ತಿಗೆ ಬರುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ:
ರಾಜ್ಯ ಸರ್ಕಾರವು ಸಂವಿಧಾನದ 162ನೇ ವಿಧಿಯಡಿ ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ ಇಂತಹ ನಿಯಮ ರೂಪಿಸಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೆ 256, 257 ಹಾಗೂ 19(1)(a) ವಿಧಿಗಳ ಉಲ್ಲಂಘನೆಯಾಗಿದೆ ಎಂದೂ ಅರ್ಜಿದಾರರು ವಾದಿಸಿದ್ದಾರೆ.
ಮುಂದೇನು?
‘ವಂದೇ ಮಾತರಂ’ನ ಎಷ್ಟು ಚರಣಗಳನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂಬ ವಿವಾದ ಇದೀಗ ನ್ಯಾಯಾಂಗದ ಅಂಗಳಕ್ಕೆ ಬಂದಿದೆ. ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬಂದ ಬಳಿಕ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.



