ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಾರಿ ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಈಗಾಗಲೂ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಪಟ್ಟಿಗೆ ಇನ್ನೂ ಹೆಚ್ಚು ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ. ಪರಿಸ್ಥಿತಿ ಹೀಗಿರುವಾಗ ಬೇಕಂತಲೇ ಲೋಡ್ ಶೆಡ್ಡಿಂಗ್ ಮಾಡ್ತಿದ್ದೀವಿ ಅಂದ್ರೆ ಹೇಗೆ? ಮಳೆಯಿಲ್ಲದೆ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗಿದೆ. ಹೈಡ್ರೋಜನ್ ಜನರೇಟರ್ ಪ್ಲಾಂಟ್ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಹೇಳಿದ್ದಾರೆ.
ಇನ್ನು ಮಳೆಬಾರದೇ ಕಂಗೆಟ್ಟಿರುವ ರೈತರಿಗೆ ಪರಮೇಶ್ವರ ಸಮಾಧಾನ ತರುವ ಮಾತನಾಡಿದ್ದು, ಈಗಾಗಲೇ ಒಂದು ತಿಂಗಳಿನಿಂದ ಮೇವು ಕಿಟ್ಗಳನ್ನು ನೀಡಲಾಗುತ್ತಿದೆ. ಇದನ್ನು ಮುಂದುವರಿಸುತ್ತೇವೆ. ತೀರಾ ಕಷ್ಟ ಎಂದರೆ ಆರ್ಥಿಕ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ದಸರಾ ಆಚರಣೆ ಆರಂಭವಾಗಲಿದೆ. ಹಬ್ಬದ ನೆಪದಲ್ಲಿ ಯಾವುದೇ ಸರ್ಕಾರಿ ಕೆಲಸಗಳನ್ನು ನಿಲ್ಲಿಸಬಾರದು ಅಥವಾ ಮುಂದೂಡಬಾರದು. ಎಲ್ಲ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಸರ್ಕಾರದ ಪ್ರಮುಖ ಕೆಲಸಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ದಸರಾ ಆಚರಣೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು.



