ಹೊಸದಿಗಂತ ಡಿಜಿಟಲ್ ಡೆಸ್ಕ:
ಕಡಲ ತಡಿ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. 12.30 ರ ವೇಳೆಗೆ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ತರೆದ ವಾಹನದ ಮೂಲಕ ಸಚಿವ ಸಂಪುಟ ಸಭೆ ನಡೆಯುವ ಪ್ರಜಾಸೌಧಕ್ಕೆ ಆಗಮಿಸಲಿದ್ದಾರೆ.
ನಗರದ ಇಕ್ಕೆಲಗಳಲ್ಲಿ ಸಚಿವರ ದಂಡನ್ನು ಸ್ವಾಗತಿಸಲು ಜನತೆ ಸಾಲುಗಟ್ಟಿ ನಿಂತಿದ್ದು, ನಗರದಲ್ಲಿ ಹಬ್ಬದ ವಾತಾವತಣ ನಿರ್ಮಾಣವಾಗಿದೆ. ಅಲ್ಲಲ್ಲಿ ಎದುರುಗೊಳ್ಳುವಿವಿಧ ಕಲಾ ತಂಡಗಳು ಮೆರುಗು ಹೆಚ್ಚಿಸಿವೆ.
ಉಡುಪಿ ಸೇರಿದಂತೆ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯ ನೆಲೆಯಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದೆ.
ಈ ಐತಿಹಾಸಿಕ ಕ್ಷಣವನ್ನು ದಾಖಲಿಸಿಕೊಳ್ಳಲು ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ‘ಪ್ರಜಾಸೌಧ’ ಸಜ್ಜುಗೊಂಡಿದೆ.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಸಚಿವ ಸಂಪುಟ ಸಭೆಗಾಗಿ ಪ್ರತ್ಯೇಕ ಮಿನಿ ಸಭಾಂಗಣ ಸಿದ್ಧಗೊಂಡಿದೆ. ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರು ಕುಳಿತುಕೊಳ್ಳಲು ಅನುವಾಗುವಂತೆ ಆಸನಗಳು, ಟೇಬಲ್ ಮತ್ತು ಸಂಪೂರ್ಣ ಹವಾನಿಯಂತ್ರಿತ ಹಾಲ್ ಸಿದ್ಧವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.



