ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ.
ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಸಂಭವಿಸಿದೆ. ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಭಾರೀ ಮತ್ತು ನಿರಂತರ ಮಳೆಯಿಂದಾಗಿ ನದಿ ಅಪಾಯಕಾರಿ ಮಟ್ಟ ತಲುಪಿದ್ದು, ಸೋಮವಾರ ರಾತ್ರಿ ಪ್ರಮುಖ ಸೇತುವೆ ಕುಸಿದು ಬಿದ್ದಿದೆ. ನದಿಪಾತ್ರದಲ್ಲಿರುವ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ.
ಡೆಹ್ರಾಡೂನ್ನ ಸಹಸ್ರಧಾರದಲ್ಲಿ ಭಾರೀ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಧಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಕೇಂದ್ರದಿಂದ ಸಂಪೂರ್ಣ ಸಹಕಾರದ ಭರವಸೆ ನೀಡಿದ ಪ್ರಧಾನಿ, ಈ ವಿಪತ್ತಿನ ಸಮಯದಲ್ಲಿ ಕೇಂದ್ರ ಸರ್ಕಾರ ಉತ್ತರಾಖಂಡದೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ.