ಹೊಸದಿಗಂತ ವರದಿ, ಹುಬ್ಬಳ್ಳಿ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಏ. ೧೮ ರಂದು ನಗರಕ್ಕೆ ಆಗಮಿಸಲಿದ್ದು, ವಿವಿಧ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು.
ಸೋಮವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಏ. ೧೮ ರಂದು ಸಂಜೆ ೪ ಗಂಟೆಗೆ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಸಂಜೆ ೫ ಗಂಟೆಗೆ ವಿದ್ಯಾನಗರದ ಬಿವಿಬಿ ಕಾಲೇಜಿನ ಬಯೋಟೆಕ್ ಭವನದಲ್ಲಿ ವಿವಿಧ ತತ್ಞರ ಜೊತೆ ಸಂವಾದ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ೭.೩೦ ಕ್ಕೆ ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೋಟೆಲ್ನಲ್ಲಿ ಬಿಜೆಪಿ ಹು-ಧಾ ಮಹಾನಗರ ಹಾಗೂ ಗ್ರಾಮೀಣ ಘಟಕದ ಶಕ್ತಿ ಕೇಂದ್ರ ಹಾಗೂ ಮಹಾ ಶಕ್ತಿ ಕೇಂದ್ರದ ಪದಾಕಾರಿಗಳ ಜೊತೆ ಸಭೆ ನಡೆಸುವರು ಎಂದರು.
ಏ. ೧೯ ರಂದು ಬೆಳಿಗ್ಗೆ ಶಿಗ್ಗಾಂವಿಗೆ ಹೋಗಲಿದ್ದು, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಸಲು ಸಾಥ್ ನೀಡಲಿದ್ದಾರೆ. ಶಿಗ್ಗಾಂವಿಯಲ್ಲಿ ಬೃಹತ್ ರೋಡ್ ಶೋ ಮೂಲಕ ಸಿಎಂ ಅವರ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಳಿಕ ಹುಬ್ಬಳ್ಳಿಗೆ ಬಂದು ಇಲ್ಲಿಂದ ವಿಮಾನ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.