ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳು ಹವಾಮಾನ ಸಂಪೂರ್ಣ ಬದಲಾಗಲಿದ್ದು, ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಬೀಸಲಿದೆ. ಭಾರತೀಯ ಹವಾಮಾನ ಇಲಾಖೆ ಮೇ 25ರಿಂದ 29ರವರೆಗೆ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ವಿಶೇಷ ಮುನ್ನೆಚ್ಚರಿಕೆ ನೀಡಿದೆ.
ಮೇ 27 ಮತ್ತು 28ರಂದು ಉತ್ತರ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳೆಯ ಕಟ್ಟಡಗಳು ಮತ್ತು ಮರಗಳ ಬಳಿ ನಿಲ್ಲದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿಗೂ ಮಳೆ ಎಚ್ಚರಿಕೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮೇ 29ರವರೆಗೆ ಅಸ್ಥಿರ ಹವಾಮಾನ ಮುಂದುವರಿಯಲಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ:
ಕರಾವಳಿಯಲ್ಲಿ ನಾಲ್ಕು ದಿನ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 26ರಿಂದ ನಿರಂತರ ಮಳೆಯ ವಾತಾವರಣ ಇರಲಿದೆ. ಗುಡುಗು ಮತ್ತು ಸಿಡಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿಗೆ ತಂಪಿನ ಸುದ್ದಿ
ಬಿಸಿಲಿನಿಂದ ಬಳಲುತ್ತಿದ್ದ ಬೆಂಗಳೂರಿನಲ್ಲಿ ಮೇ 29ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಮತ್ತು ರಾತ್ರಿ ವೇಳೆ ಮಳೆ ಸುರಿಯುವ ಮುನ್ಸೂಚನೆ ಇದ್ದು, ನಗರದ ತಾಪಮಾನದಲ್ಲೂ ಗಣನೀಯ ಇಳಿಕೆಯಾಗಲಿದೆ.



