ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಯುವಜನತೆಯ ಕಲ್ಯಾಣ ಮತ್ತು ಅವರ ಉಜ್ವಲ ಭವಿಷ್ಯವನ್ನು ಖಚಿತಪಡಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅತ್ಯುನ್ನತ ಆದ್ಯತೆ ಹಾಗೂ ಅಚಲ ಸಂಕಲ್ಪವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಗುರುವಾರ ತಿಳಿಸಿದ್ದಾರೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ ಬೆನ್ನಲ್ಲೇ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದ್ದಾರೆ.
ಮೈಲಿಗಲ್ಲಾಗಲಿದೆ ಪ್ರಧಾನಿ ಮೋದಿಯವರ ನಿರ್ಧಾರ
ಈ ಕುರಿತು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಯುವಕರ ಕಲ್ಯಾಣ ಮತ್ತು ಅವರ ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಮೊದಲ ಆದ್ಯತೆ ಮತ್ತು ದೃಢ ಸಂಕಲ್ಪವಾಗಿದೆ. ಪೇಪರ್ ಲೀಕ್ ದಂಧೆಯ ಮೂಲಕ ಯುವ ಪೀಳಿಗೆಯ ಶ್ರಮದ ಜತೆ ಆಟವಾಡುವವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡಿರುವ ಈ ಕಟ್ಟುನಿಟ್ಟಿನ ನಿರ್ಧಾರವು ಭವಿಷ್ಯದಲ್ಲಿ ಒಂದು ದೊಡ್ಡ ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
‘ಸಂಸತ್ ಚಲೋ’ ಬೆನ್ನಲ್ಲೇ ಕೇಂದ್ರದ ಮುನ್ನೆಚ್ಚರಿಕೆ
ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ (NEET) ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮೂರು ದಿನಗಳ ಹಿಂದೆ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಬೃಹತ್ ‘ಸಂಸತ್ ಚಲೋ’ ಮೆರವಣಿಗೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕಠಿಣ ನಿಲುವು ತಳೆದಿದೆ. ದೆಹಲಿಯಲ್ಲಿ ನಡೆದಿದ್ದ ಈ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಸಾರ್ವಜನಿಕ ರಸ್ತೆಯಲ್ಲೇ ಲಾಠಿಚಾರ್ಜ್ ಹಾಗೂ ಕಣ್ಣೀರು ಅನಿಲ ಪ್ರಯೋಗ ಮಾಡಿದ್ದರಿಂದ ನೂರಾರು ವಿದ್ಯಾರ್ಥಿಗಳು ಮತ್ತು ಸುಮಾರು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಈ ಭಾರಿ ಆಕ್ರೋಶದ ಬಳಿಕವೇ ಪ್ರಧಾನಿ ಮೋದಿ ಮಂಗಳವಾರ ಎನ್ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೊದಲ ಬಾರಿಗೆ ಈ ವಿಷಯದ ಕುರಿತು ಮೌನ ಮುರಿದಿದ್ದರು.



