ಮದೆನಾಡು ಬಳಿ ಗುಡ್ಡದಲ್ಲಿ ಬಿರುಕು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಕಾದಿದೆ ಆಪತ್ತು

ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ಧಾರಾಕಾರ ಮಳೆ ಮುಂದುವರಿದಿದೆ. ಅಲ್ಲಲ್ಲಿ ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದ್ದು, ಮತ್ತೊಂದೆಡೆ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು ಬಳಿ ಗುಡ್ಡದಲ್ಲಿ ದೊಡ್ಡ ಪ್ರಮಾಣದ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
2018ರಲ್ಲಿ ಮಣ್ಣು ಜರಿದು ರಸ್ತೆ ಬಂದ್ ಆಗಿದ್ದ ಸ್ಥಳದಲ್ಲೇ ಮತ್ತೆ ಬಿರುಕು ಕಾಣಿಸಿಕೊಂಡಿದ್ದು, ಬಿರುಕು ಬಿಟ್ಟ ಸ್ಥಳದಿಂದ ಭಾರೀ ಪ್ರಮಾಣದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಮಣ್ಣು ಜಾರಿದರೆ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ (NH 275)ಯಲ್ಲಿ ವಾಹನ ಸಂಚಾರ ದುಸ್ತರವಾಗಲಿದೆ.

ಈ ಪ್ರದೇಶದ ರಸ್ತೆ ಬದಿಯುದ್ದಕ್ಕೂ ವಿದ್ಯುತ್ ಕಂಬಗಳಿದ್ದು, ಒಂದು ವೇಳೆ ಮಣ್ಣು ಕುಸಿದು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನವರೆಗೆ ವಾಹನ ಸಂಚಾರವನ್ನು ನಿಷೇಧಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಇಂಜಿನಿಯರ್ ಅವರು ಜಿಲ್ಲಾಡಳಿತವನ್ನು ಕೋರಿದ್ದಾರೆ.
ಶಾಸಕರ ಭೇಟಿ: ಮಡಿಕೇರಿ-ಸಂಪಾಜೆ ಮಾರ್ಗದ ಮದೆ ಗ್ರಾಮದ ಹೆದ್ದಾರಿ ಬಳಿ ಮಣ್ಣು ಕುಸಿತ ಉಂಟಾಗುತ್ತಿರುವ ಪ್ರದೇಶಕ್ಕೆ ಶಾಸಕ ಕೆ.ಜಿ.ಬೋಪಯ್ಯ ಅವರು ಭೇಟಿ ನೀಡಿ ವೀಕ್ಷಿಸಿದರು.
ಹೆದ್ದಾರಿ ಬಳಿ ಮಣ್ಣು ಕುಸಿಯುವ ಸಾಧ್ಯತೆ ಇದ್ದು, ಈ ಸಂಬಂಧ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ವಿದ್ಯುತ್ ಮಾರ್ಗ ಬದಲಿಸಲಾಗುತ್ತಿದೆ ಎಂದರು.
ಹೆದ್ದಾರಿಯಲ್ಲಿ ಮಣ್ಣು ಕುಸಿದರೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ ಎಂದು ಶಾಸಕರು ಹೇಳಿದರು.
ಮಳೆಯ ನಡುವೆಯೂ ಸೆಸ್ಕ್ ಇಲಾಖೆಯ ಸಿಬ್ಬಂದಿಗಳು ವಿದ್ಯುತ್ ಮಾರ್ಗವನ್ನು ಬದಲಿಸುತ್ತಿದ್ದುದು ಕಂಡುಬಂದಿತು. ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್, ಹೆದ್ದಾರಿ ವಿಭಾಗದ ಸಹಾಯಕ ಎಂಜಿನಿಯರ್ ಮುರುಗೇಶ್ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!