ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಹಳ್ಳದಲ್ಲಿ ಈಜಲು ತೆರಳಿದ್ದ ಅಣ್ಣ-ತಮ್ಮ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ.
ಮೃತರನ್ನು ಸಾಗರ ಬಾಬು ಮಾದರ (15) ಹಾಗೂ ಪ್ರವೀಣ ಬಾಬು ಮಾದರ (13) ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನ ಇಬ್ಬರೂ ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಹಳ್ಳದ ಬಳಿ ತೆರಳಿದ್ದರು. ಈ ವೇಳೆ ತಮ್ಮ ಪ್ರವೀಣ ನೀರಿಗೆ ಇಳಿದಾಗ ಮುಳುಗಲು ಆರಂಭಿಸಿದ್ದಾನೆ ಎನ್ನಲಾಗಿದೆ. ಅವನನ್ನು ರಕ್ಷಿಸಲು ಅಣ್ಣ ಸಾಗರ ಕೂಡ ನೀರಿಗೆ ಇಳಿದಿದ್ದಾನೆ. ಆದರೆ ಇಬ್ಬರಿಗೂ ಈಜು ಬಾರದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ತಡವಾಗಿ ಬೆಳಗಿಗೆ ಬಂದಿದೆ ಎನ್ನಲಾಗಿದೆ.
ಇದನ್ನೂ ಓದಿ:
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ ಬಾಲಕರ ಕುಟುಂಬಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.
ಈ ಘಟನೆಯ ಕುರಿತು ಮೂಡಲಗಿ ಪೊಲೀಸ್ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈ ಗೊಂಡಿದ್ದಾರೆ.



