ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದ ವಿವಿಧ ಕಡೆ ಭಾರಿ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ ನಡೆಸಿ ನಾಗರಿಕರು ಗೊಂದಲ ಆತಂಕಕ್ಕೆ ಒಳಗಾದ ಘಟನೆ ನಡೆದಿದೆ.
ಆದರೆ ಈ ಬಗ್ಗೆ ತಕ್ಷಣವೇ ಸ್ಪಷ್ಟನೆ ನೀಡಿದ ಅಧಿಕಾರಿಗಳು, ಯಾವುದೇ ಗಾಬರಿಪಡುವ ಅಗತ್ಯವಿಲ್ಲ, ಇದು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ನಡೆಸುತ್ತಿರುವ ಭಯೋತ್ಪಾದನಾ ವಿರೋಧಿ ಅಣಕು ಕಾರ್ಯಾಚರಣೆಯ ಭಾಗ ಎಂದು ತಿಳಿಸಿದ್ದಾರೆ.
ನಗರದ ಹಲವು ಪ್ರಮುಖ ಹಾಗೂ ಬಹುಮಹಡಿ ಕಟ್ಟಡಗಳ ಮೇಲೆ ಎನ್ಎಸ್ಜಿ ಹೆಲಿಕಾಪ್ಟರ್ ಪರೀಕ್ಷಾರ್ಥ ಹಾರಾಟ ನಡೆಸಿತು. ಕಡಿಮೆ ಎತ್ತರದಲ್ಲಿ ಹೆಲಿಕಾಪ್ಟರ್ ಸಂಚರಿಸಿದ್ದರಿಂದ ಅನೇಕರು ಅದರ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಾರಣವೇನು ಎಂದು ಪ್ರಶ್ನಿಸಿದ್ದರು. ಇದಕ್ಕೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸಂಜೆ ನಡೆಯಲಿರುವ ಪೂರ್ಣ ಪ್ರಮಾಣದ ಭಯೋತ್ಪಾದನಾ ವಿರೋಧಿ ಅಣಕು ಕವಾಯತಿಗೆ ಮುನ್ನ ಕಾರ್ಯಾಚರಣೆಯ ಪೂರ್ವಸಿದ್ಧತೆ ಹಾಗೂ ಕಾರ್ಯತಂತ್ರವನ್ನು ಪರಿಶೀಲಿಸುವ ಉದ್ದೇಶದಿಂದ ಈ ಪರೀಕ್ಷಾರ್ಥ ಹಾರಾಟ ನಡೆಸಲಾಗಿದೆ ಎಂದಿದ್ದಾರೆ.
ಈ ಅಣಕು ಕಾರ್ಯಾಚರಣೆಯ ಮೂಲಕ ನಗರದಲ್ಲಿ ಭಯೋತ್ಪಾದಕ ದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದರೆ ಭದ್ರತಾ ಪಡೆಗಳು ಎಷ್ಟು ವೇಗವಾಗಿ ಪ್ರತಿಕ್ರಿಯಿಸಬಲ್ಲವು, ವಿವಿಧ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯ ಹೇಗಿರುತ್ತದೆ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಹೇಗೆ ಪರಿಣಾಮಕಾರಿಯಾಗಿ ನಡೆಸಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ.
ಎನ್ಎಸ್ಜಿ ಜೊತೆಗೆ ಸ್ಥಳೀಯ ಪೊಲೀಸ್ ಇಲಾಖೆ ಹಾಗೂ ಇತರ ಭದ್ರತಾ ಸಂಸ್ಥೆಗಳೂ ಈ ಮೆಗಾ ಅಣಕು ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿವೆ. ಕಾರ್ಯಾಚರಣೆ ನಡೆಯುವ ವೇಳೆ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.



