April 11, 2026
Saturday, April 11, 2026
spot_img

ಕನಸುಗಳ ಬೆನ್ನತ್ತಿದ್ದ ಜೀವ ಹಳಿ ತಪ್ಪಿತು: ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವತಿ ರೈಲಿಗೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಉದ್ಯೋಗದ ಕನಸು ಹೊತ್ತು ವರ್ಷಗಟ್ಟಲೆ ಕಷ್ಟಪಟ್ಟು ಓದುತ್ತಿದ್ದ ಯುವತಿಯೊಬ್ಬಳು, ನೇಮಕಾತಿ ಪ್ರಕ್ರಿಯೆಗಳ ವಿಳಂಬದಿಂದ ಮನನೊಂದು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ನಗರದ ಶಿವಗಿರಿಯಲ್ಲಿ ಸಂಭವಿಸಿದೆ.

ಘಟನೆಯ ವಿವರ:

ಬಳ್ಳಾರಿ ಮೂಲದ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಲ್ಲವಿ ಕಳೆದ ನಾಲ್ಕು ವರ್ಷಗಳಿಂದ ಧಾರವಾಡದಲ್ಲಿ ವಾಸ್ತವ್ಯ ಹೂಡಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದರು. ಹಗಲಿರುಳು ಅಭ್ಯಾಸ ನಡೆಸುತ್ತಿದ್ದರೂ ಸಹ, ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ನೇಮಕಾತಿಗಳು ನಡೆಯದ ಕಾರಣ ಅವರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಶಿವಗಿರಿಯ ರೈಲ್ವೆ ಹಳಿಯ ಮೇಲೆ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಕಳೆದ ಹಲವು ವರ್ಷಗಳಿಂದ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಥವಾ ಹೊಸ ಅಧಿಸೂಚನೆಗಳ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಆತಂಕಕ್ಕೆ ಈ ಘಟನೆ ಸಾಕ್ಷಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !