ಹೊಸದಿಗಂತ ವರದಿ ಕುಶಾಲನಗರ:
ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನೀರಾವರಿ, ವಿದ್ಯುತ್, ಅರಣ್ಯ ಇಲಾಖೆಗೆ ಸೇರಿದ ಅಧಿಕಾರಿಗಳ ಸಭೆ ಹಾರಂಗಿಯ ಪ್ರವಾಸಿ ಮಂದಿರದಲ್ಲಿ ನಡೆಯಿತು.
ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಸೋಮವಾರಪೇಟೆ, ಮಡಿಕೇರಿ ಕುಶಾಲನಗರ, ಸುಂಟಿಕೊಪ್ಪ, ವಿಭಾಗದಲ್ಲಿನ ಸಂಪೂರ್ಣವಾದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಶಾಸಕರು, ಮುಂದಿನ ದಿನಗಳಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ವಿದ್ಯುತ್ ಲೈನ್ ( ತಂತಿ) ಗಳ ಸರಿಪಡಿಸುವಿಕೆ ವಿದ್ಯುತ್ ಮಾರ್ಗ ಹಾದು ಹೋಗಿರುವ ಕಡೆಗಳಲ್ಲಿ ಮರಗಳ ತೆರವು, ಕೊಂಬೆಗಳ ಕಡಿಯುವಿಕೆ ಸೇರಿದಂತೆ ಗ್ರಾಮಾಂತರ ಮತ್ತು ನಗರ ಪ್ರದೇಶಗಳಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಹಾರಂಗಿ ಅಣೆಕಟ್ಟೆಗೆ ಸಂಬಂಧಿಸಿದಂತೆ ಮತ್ತು ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. ಬಳಿಕ ಮುಂದಿನ ಯೋಜನೆಗಳ ಬಗ್ಗೆ ಮತ್ತು ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದುಕೊಂಡರು.