ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ನೆನಪನ್ನು ಮುಂದಿನ ಪೀಳಿಗೆಗೆ ದಾಟಿಸಲು, ಅವರು ಭೇಟಿ ನೀಡಿದ್ದ ಆಯ್ದ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ಗಳನ್ನು ಸ್ಥಾಪಿಸಲಾಗುತ್ತದೆ. ಇದು ಪ್ರವಾಸಿಗರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ಸಾರುವ ಕೇಂದ್ರಗಳಾಗಲಿವೆ.
ಮತ್ತೊಂದೆಡೆ, ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ನೀಡಿದ ದಂತಕಥೆ ಪುಟ್ಟಣ್ಣ ಕಣಗಾಲ್ ಅವರಿಗೆ ಸರ್ಕಾರ ವಿಶೇಷ ಗೌರವ ಸಲ್ಲಿಸಿದೆ. ಅವರ ಅಭಿಮಾನಿಗಳ ಮತ್ತು ಚಿತ್ರರಂಗದ ಬಹುಕಾಲದ ಬೇಡಿಕೆಯಂತೆ, ಪುಟ್ಟಣ್ಣ ಕಣಗಾಲ್ ಅವರ ನಿವಾಸವನ್ನು ವಸ್ತುಸಂಗ್ರಹಾಲಯವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಅವರ ಅಮೂಲ್ಯ ಕೃತಿಗಳು, ಪ್ರಶಸ್ತಿಗಳು ಮತ್ತು ಸಿನಿಮೀಯ ಬದುಕಿನ ಸ್ಮರಣಿಕೆಗಳನ್ನು ಸಂರಕ್ಷಿಸುವ ಗುರಿ ಹೊಂದಲಾಗಿದೆ.



