ಹೊಸದಿಗಂತ ಡಿಜಿಟಲ್ ಡೆಸ್ಕ್
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಸಾವನ್ನಪ್ಪಿದ ನಟಿ ತ್ವಿಶಾ ಶರ್ಮಾ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ. ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಘಟನೆ ಹೊಸ ವಿವಾದಕ್ಕೆ ಕಾರಣವಾಗಿದೆ. ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡದಂತೆ ಒತ್ತಡ ಹೇರಲು ಈ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಸಲೂನ್ ಮಾಲೀಕನ ಮೇಲೆ ಹಲ್ಲೆ
ಆರೋಪಿ ಸಮರ್ಥ್ ಸಿಂಗ್ ನಿವಾಸದ ಸಮೀಪ ಸಲೂನ್ ನಡೆಸುತ್ತಿದ್ದ ನೀರಜ್ ದುಬೆ ಅವರ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ಅವರನ್ನು ಸುತ್ತುವರಿದು ಹಲ್ಲೆ ನಡೆಸುತ್ತಿರುವ ದೃಶ್ಯಗಳು ದಾಖಲಾಗಿವೆ. ದಾಳಿಯಿಂದ ಪಾರಾಗಲು ದುಬೆ ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಇದನ್ನೂ ಓದಿ:
ಪೊಲೀಸರಿಗೆ ದೂರು, ರಕ್ಷಣೆಗೆ ಮನವಿ
ಘಟನೆಯ ಬಳಿಕ ನೀರಜ್ ದುಬೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ.
ತ್ವಿಶಾ ಸಾವಿನ ಪ್ರಕರಣದ ತನಿಖೆ ಮುಂದುವರಿಕೆ
ಮೇ 12ರಂದು ತ್ವಿಶಾ ಶರ್ಮಾ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಅವರ ಕುಟುಂಬಸ್ಥರು ಪತಿ ಸಮರ್ಥ್ ಸಿಂಗ್ ಹಾಗೂ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದರು. ಈ ಸಂಬಂಧ ಇಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.



