ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಸೃಷ್ಟಿಸಿದ್ದ ದಾಖಲೆಗಳನ್ನು ಆಮ್ ಆದ್ಮಿ ಪಕ್ಷ ಮುರಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟೀಕೆ ಮಾಡಿದರು. ಎಎಪಿ ಸರ್ಕಾರ ಹಗರಣಗಳ ಸರ್ಕಾರವಾಗಿ ಮಾರ್ಪಟ್ಟಿದ್ದು, ಇದನ್ನು ಕಿತ್ತೊಗೆಯಬೇಕಿದೆ ಎಂದರು. ಇಂದು ದೆಹಲಿಯಲ್ಲಿ ಬಿಜೆಪಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ದೆಹಲಿ ಸರ್ಕಾರ ವಿರುದ್ಧ ಹರಿಹಾಯ್ದರು.
1951ರಲ್ಲಿ ಭಾರತೀಯ ಜನಸಂಘ ರಚನೆಯಾಗಿದ್ದು, ಅಂದಿನಿಂದ ದೇಶದಲ್ಲಿ ಪಕ್ಷಗಳ ಸಿದ್ಧಾಂತಗಳು ಬದಲಾಗಿವೆ ಎಂದರು. ಕಾಂಗ್ರೆಸ್ ಪಕ್ಷ ಈಗ ಸಹೋದರ-ಸಹೋದರಿಯರ ಪಕ್ಷವಾಗಿ ಮಾರ್ಪಟ್ಟಿದೆ. ಮೊದಲಿನಿಂದಲೂ 370ನೇ ವಿಧಿಯನ್ನು ರದ್ದುಪಡಿಸುವುದಾಗಿ ಹೇಳುತ್ತಿದ್ದೆವು, ಪ್ರಧಾನಿ ನರೇಂದ್ರ ಮೋದಿಯವರ ಇಚ್ಛಾಶಕ್ತಿಯಿಂದ ಈಗ ಅದನ್ನು ರದ್ದುಗೊಳಿಸಲಾಗಿದೆ. ಇದು ತಿಹಾಸದ ಪುಟಗಳಲ್ಲಿ ಬರೆದಿಡುವಂತಹ ಘಟನೆ ಎಂದು ಜೆಪಿ ನಡ್ಡಾ ಹೇಳಿದರು.
ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಗುರಿಗಳ ಅಗತ್ಯವನ್ನು ಮೋದಿ ಗುರುತಿಸಿದ್ದಾರೆ. ಇತರ ರಾಜಕೀಯ ಪಕ್ಷಗಳು ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ರಾಜಕೀಯ ಮಾಡುತ್ತಿದ್ದರೆ, ಬಿಜೆಪಿ ಕಾರ್ಯಕರ್ತರು ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಮತ್ತು ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ ಎಂದು ಹೇಳಿದರು.