ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಹತ್ತರ ಬದಲಾವಣೆಗಳಾಗುತ್ತಿವೆ. ಇಷ್ಟು ದಿನ ಆಪ್ನಲ್ಲಿ ಸಕ್ರಿಯರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇಂದು ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಕಮಲ ಹಿಡಿದಿದ್ದಾರೆ.
ಇದಕ್ಕೂ ಮುನ್ನ ನಿನ್ನೆ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭಾಸ್ಕರ್ ರಾವ್ ಅವರು ಭೇಟಿ ಮಾಡಿ, ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಗೆ ಕೂಡ ಭೇಟಿ ನೀಡಿ ಅಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಆ ಚರ್ಚೆಗಳು ಯಶಸ್ವಿಯಾಗಿದ್ದು, ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಸವನಗುಡಿ ವಿಧಾನಸಭಾ ಕ್ಷೇತ್ರದಿಂದ ಎಎಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ಕಣಕ್ಕಿಳಿಯಲಿದ್ದಾರೆ ಎಂದು ಭಾರೀ ಚರ್ಚೆ ನಡೆದಿತ್ತು. ಇತ್ತೀಚಿನ ಬದಲಾವಣೆಗಳಿಂದಾಗಿ ಪಕ್ಷ ತೊರೆದಿದ್ದಾರೆ. ಬಸವನಗುಡಿ ಬಿಜೆಪಿಯ ಭದ್ರಕೋಟೆ ಇದೀಗ ಈ ಕ್ಷೇತ್ರದಿಂದಲೇ ಭಾಸ್ಕರ್ ರಾವ್ ಸ್ಪರ್ಧಿಸುತ್ತಾರಾ ನೋಡಬೇಕು. ಯಾಕೆಂದರೆ, ಬಸವನಗುಡಿಯಲ್ಲಿ ಈಗಾಗಲೇ ಬಿಜೆಪಿಯ ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಇರುವುದು ಕುತೂಹಲಕ್ಕೆ ಕಾರಣವಾಗಿದೆ.
ಆಪ್ನಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಭಾಸ್ಕರ್ ರಾವ್ ಈ ಹಿಂದೆ ಬಿಜೆಪಿ ವಿರುದ್ಧ ಹಲವು ಭ್ರಷ್ಟಾಚಾರದ ಆರೋಪಗಳನ್ನು ಸಹ ಮಾಡಿದ್ದರು. ಇದೀಗ ಅದೇ ಬಿಜೆಪಿಗೆ ಸೇರ್ಪಡೆಯಾಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಲ್ಲದೆ ಹಲವು ಚರ್ಚೆಗಳಿಗೂ ಗ್ರಾಸವಾಗಿದೆ.