ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಹಿರಿಯ ನಾಯಕ ಅಜಂ ಖಾನ್ (Azam Khan) ಅವರ ಪುತ್ರ ಅಬ್ದುಲ್ಲಾ ಅಜಂ ಖಾನ್(Abdullah Azam Khan) ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ.
ಉತ್ತರ ಪ್ರದೇಶದ(Uttar Pradesh) ಸುವಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಖಾನ್ ಅವರನ್ನು ಅನರ್ಹಗೊಳಿಸಿದ್ದು ಇದು ಎರಡನೇ ಬಾರಿ.
ಸೋಮವಾರ, ಮೊರಾದಾಬಾದ್ನ ನ್ಯಾಯಾಲಯವು 15 ವರ್ಷಗಳ ಹಿಂದಿನ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿರುವ ಅಬ್ದುಲ್ಲಾ ಅಜಂ ಖಾನ್ ಮತ್ತು ಅವರ ತಂದೆಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಜನವರಿ 29, 2008 ರಂದು ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ನಂತರ ಸಾರ್ವಜನಿಕ ಸೇವಕನ ಕೆಲಸಕ್ಕೆ ಅಡ್ಡಿಪಡಿಸಿದ್ದು ಸೇರಿದಂತೆ ಇನ್ನಿತರ ಆರೋಪದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾಗಿತ್ತು.
ಡಿಸೆಂಬರ್ 31, 2007 ರಂದು ರಾಂಪುರದಲ್ಲಿ ಕೇಂದ್ರೀಯ ಮೀಸಲು ಪೋಲೀಸರ ಪಡೆ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ತಪಾಸಣೆಗಾಗಿ ಬೆಂಗಾವಲು ಪಡೆಯನ್ನು ಪೊಲೀಸರು ತಡೆದಿದ್ದರು. ನ್ಯಾಯಾಲಯವು ಇಬ್ಬರಿಗೂ ಜಾಮೀನು ನೀಡಿತ್ತು. ಕಾನೂನಿನ ಅಡಿಯಲ್ಲಿ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದ ಶಾಸಕರನ್ನು ಅಂತಹ ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹಗೊಳಿಸಬಹುದು. ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ನಂತರ ಇನ್ನೂ ಆರು ವರ್ಷಗಳವರೆಗೆ ಅವರು ಅನರ್ಹರಾಗಿರುತ್ತಾರೆ.