ಹೊಸದಿಗಂತ ವರದಿ ಚಿತ್ರದುರ್ಗ:
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಚಿತ್ರದುರ್ಗ ಜಿಲ್ಲೆ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಉಪನ್ಯಾಸಕರ ಖಾಯಂಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಕಾಲೇಜು ಪ್ರವೇಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಇನ್ನೂ ಖಾಯಂ ನೇಮಕಾತಿಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದರಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀಳುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಎಬಿವಿಪಿ ಆರೋಪಿಸಿದೆ.
ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರನ್ನು ಶೀಘ್ರದಲ್ಲೇ ಖಾಯಂಗೊಳಿಸಿ, ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಎಬಿವಿಪಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಇದನ್ನೂ ಓದಿ:
ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ದೊರೆಯುತ್ತಿಲ್ಲ. ಸರ್ಕಾರ ಕೂಡಲೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಉಪನ್ಯಾಸಕರನ್ನು ಖಾಯಂಗೊಳಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಕಾಪಾಡಬೇಕು. ರಾಜ್ಯಾದ್ಯಂತ ವಿದ್ಯಾರ್ಥಿಗಳ ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕೆಂದು ಆಗ್ರಹಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕದಲ್ಲಿ ಒಂದು ವಾರಗಳ ಆಂದೋಲನ ಹಮ್ಮಿಕೊಂಡಿದ್ದು, ಕಪ್ಪುಪಟ್ಟಿ ಧರಿಸಿ ಕಾಲೇಜು ಪ್ರವೇಶ, ತರಗತಿ ಬಹಿಷ್ಕಾರ ಹಾಗೂ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆನಡೆಸಲು ಯೋಜನೆ ತಯಾರಿಸಿಕೊಂಡಿದೆ. ಈ ಆಂದೋಲನ ನಡೆಸುವ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗಿ ನಿಂತಿದೆ ಎಂದು ತಿಳಿಸಿದರು.
ಎಬಿವಿಪಿ ರಾಜ್ಯ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ವಿಭಾಗ ಸಂಚಾಲಕ ಸಂಜಯ್, ಸಾಮಾಜಿಕ ಜಾಲತಾಣ ಪ್ರಮುಖ ಆದರ್ಶ್, ಮಿಥುನ್, ಸುದರ್ಶನ್, ಸುದೀಪ್, ಪವಿತ್ರ, ಅಮೂಲ್ಯ, ಕಾವ್ಯ ಮತ್ತಿತರರು ಈ ಆಂದೋಲನದಲ್ಲಿ ಭಾಗವಹಿಸಿದ್ದರು.



