ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸಿ, ಆ.11 ರಂದು ಮಹತ್ವದ ಆದೇಶ ನೀಡಿದೆ. ಈ ಆದೇಶ ಹೊರಬಿದ್ದು ಒಂದು ವಾರವಾದರೂ, ಸರ್ಕಾರ ಯಾವುದೇ ಅಧಿಕೃತ ಕ್ರಮವನ್ನು ಕೈಗೊಳ್ಳಲು ಸಾಧ್ಯವಾಗದಿರುವುದು ಮುಂದೇನು ಎಂಬ ಪ್ರಶ್ನೆ ಉದ್ಭವಿಸಿದೆ.
ಎಸಿಬಿಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯೊಂದಿಗೆ ವಿಲೀನ ಮಾಡಬೇಕು, ಎಸಿಬಿ ವ್ಯಾಪ್ತಿಯಲ್ಲಿ ಸದ್ಯ ತನಿಖೆಗೆ ಒಳಪಟ್ಟಿರುವ ಹಾಗೂ ತನಿಖೆ ನಡೆಸುತ್ತಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಬೇಕು. ಎಸಿಬಿಯಲ್ಲಿರುವ ಅಧಿಕಾರಿ, ಸಿಬ್ಬಂದಿಯನ್ನು ಲೋಕಾಯುಕ್ತಕ್ಕೆ ವರ್ಗಾಯಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಿಲ್ಲ ಎಂಬ ತೀರ್ಮಾನಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬಂದಿದೆ. ಆದರೂ, ಈವರೆಗೆ ಸರ್ಕಾರದಿಂದ ಯಾವುದೇ ಕ್ರಮಕ್ಕೆ ಸ್ಪಷ್ಟತೆ ಸಿಕ್ಕಿಲ್ಲ.
ಇದರ ಹೊರತಾಗಿಯೂ ಹೈಕೋರ್ಟ್ ಆದೇಶದ ಬಳಿಕ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಸರ್ಕಾರವು ಅಡ್ವೊಕೇಟ್ ಜನರಲ್ ಅವರಿಂದ ವರದಿ ಬಯಸಿದೆ. ಇದು ಇನ್ನೂ ಸರ್ಕಾರದ ಕೈಸೇರಿಲ್ಲ ಎನ್ನಲಾಗಿದೆ. ಇನ್ನೊಂದೆಡೆ ಲೋಕಾಯುಕ್ತ ಸಂಸ್ಥೆಯು ಕೂಡ ನ್ಯಾಯಾಲಯದ ನಿರ್ದೇಶನದ ಬಳಿಕ ಕಾರ್ಯದ ಬಗ್ಗೆ ಸ್ಪಷ್ಟತೆ ಇದ್ದಂತಿಲ್ಲ. ಮುಂದಿನ ಕ್ರಮಗಳನ್ನು ಕೈಗೊಳ್ಳುವ ಮುನ್ನ ಸರ್ಕಾರ ನಮ್ಮೊಂದಿಗೆ ಚರ್ಚಿಸಬೇಕು ಎಂಬ ಲೋಕಾಯುಕ್ತದ ಸಲಹೆಗೆ ಸರ್ಕಾರ ಮನ್ನಣೆ ನೀಡುವುದೇ ಎಂಬ ಪ್ರಶ್ನೆಯೂ ಎದ್ದಿದೆ.