ಹೊಸದಿಗಂತ ,ಮಡಿಕೇರಿ:
ಟಿಪ್ಪರ್ ಹಾಗೂ ಗೂಡ್ಸ್ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ.
ಪೊನ್ನಂಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೆಳಗ್ಗೆ 9 ಗಂಟೆಗೆ ಆಟೋ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಆಟೋದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ಕೇರಳ ರಾಜ್ಯದ ನೋಂದಣಿ ಸಂಖ್ಯೆ ಹೊಂದಿದ್ದು, ಗಾಯಗೊಂಡವರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೊನ್ನಂಪೇಟೆ ಬಸ್ ನಿಲ್ದಾಣದಿಂದ ರಾಮಕೃಷ್ಣ ಆಶ್ರಮದವರೆಗೆ ಕೆಲವರು ರಸ್ತೆಯ ಎರಡೂ ಬದಿಯಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.
ಇತ್ತೀಚೆಗೆ ಪೊನ್ನಂಪೇಟೆ-ಗೋಣಿಕೊಪ್ಪಲು ರಸ್ತೆಯಲ್ಲಿ ಹಗಲಿರುಳು ಹೆಚ್ಚಾಗಿ ಟಿಪ್ಪರ್’ಗಳು ಓಡಾಡುತ್ತಿರುವುದರಲ್ಲದೆ ಅತಿ ವೇಗವಾಗಿ ಸಂಚರಿಸುತ್ತಿವೆ. ಇವುಗಳ ವೇಗಕ್ಕೆ ಹಾಗೂ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದಕ್ಕೆ ಪೊಲೀಸರು ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.