ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಸ್ತೆ ಅಗಲೀಕರಣ ಕಾಮಗಾರಿಗಾಗಿ ಮರ ತೆರವುಗೊಳಿಸುತ್ತಿದ್ದಾಗ ರಸ್ತೆಯಲ್ಲಿ ನಿಲ್ಲಿಸಿದ್ದ ಸರ್ಕಾರಿ ನರ್ಮ್ ಬಸ್ ಮೇಲೆ ಮರ ಬಿದ್ದು, ಮುಂಭಾಗದ ಗಾಜು ಪುಡಿಯಾಗಿ, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಉಡುಪಿ ಜಿಲ್ಲೆಯ ನೆಲ್ಲಿಕಾರು ಬಳಿ ಬುಧವಾರ ನಡೆದಿದೆ.
ಕಾರ್ಕಳದಿಂದ ನೆಲ್ಲಿಕಾರಿಗೆ ತೆರಳುವ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಯ ಮರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿದ್ದರು. ಈ ವೇಳೆ ಎರಡು ಕಡೆಗಳಲ್ಲಿ ಬರುತ್ತಿದ್ದ, ವಾಹನಗಳನ್ನು ನಿಲ್ಲಿಸಲಾಗಿತ್ತು.
ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ರಸ್ತೆಯಲ್ಲಿ ನಿಲ್ಲಿಸಿದ್ದ ಸರ್ಕಾರಿ ನರ್ಮ್ ಬಸ್ ಮೇಲೆ ಮರ ಬಿದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ರಸ್ತೆ ಕಾಮಗಾರಿ ನಡೆಸುತ್ತಿರುವವರ ಅಜಾಗರೂಕತೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.